ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ – Kannada News | Priyank Kharge Orders Strict Crackdown on Illegal Sand Mining, Issues Stern Directive

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ (karnataka) ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಣೆಗೆ ಸಂಪೂರ್ಣ ಬ್ರೇಕ್ ಹಾಕಲು ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯಾದ್ಯಂತ ‘ಝೀರೋ ಟಾಲರೆನ್ಸ್’ ನೀತಿ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಡಕ್​​ ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿ

ಈ ಕುರಿತಾಗಿ ಗೃಹ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. “ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಆದಾಯಕ್ಕೂ ಧಕ್ಕೆ ತರುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸದೆ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಸರ್ಕಾರ ಅನುಸರಿಸುತ್ತಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೊಳಿಸಲಾಗುತ್ತಿದೆ”.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್​

“ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು”.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದ ಕೇಂದ್ರ ಜಲಶಕ್ತಿ ಸಚಿವಾಲಯ

“ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್‌ಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸುವುದು, ಅಕ್ರಮ ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ತಡೆಯುವುದು ಹಾಗೂ ಕಾನೂನು ಕ್ರಮ ಕೈಗೊಳ್ಳುವುದು ಸಂಬಂಧಿತ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಯಾಗಿದೆ”.

ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಸೂಚನೆ

‘‘ರಾಜ್ಯದ ಗಡಿ ಪ್ರದೇಶಗಳು ಸೇರಿದಂತೆ ಅಂತಾರಾಜ್ಯ ಮಾರ್ಗಗಳಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತನಿಖಾ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಕಂಡುಬಂದರೆ ಸಂಬಂಧಿತ ಇಲಾಖೆಯ ಗಮನಕ್ಕೆ ತರುವಂತೆ ನಿರ್ದೇಶಿಸಲಾಗಿದೆ’’

ಇದನ್ನೂ ಓದಿ: ಬೆಂಗಳೂರಿನ 2ನೇ ಏರ್​ಪೋರ್ಟ್​ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

‘‘ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿರುವ ಅಕ್ರಮ ಮರಳು ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಿ, ಅಗತ್ಯವಿದ್ದಲ್ಲಿ ದಿಢೀರ್ ದಾಳಿ ನಡೆಸಬೇಕು. ಈ ಅಕ್ರಮ ದಂಧೆಯಲ್ಲಿ ನಿರಂತರವಾಗಿ ತೊಡಗಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ಹಾಗೂ ಸಂಗ್ರಹಣೆ ಪ್ರಕರಣಗಳ ಕುರಿತು ಠಾಣಾವಾರು ಪರಿಶೀಲನೆ ನಡೆಸಿ, ಅಧೀನ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು. ಅಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಿಯಮಿತವಾಗಿ ನಡೆಸಿ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ’’ ನಿರ್ದೇಶಿಸಲಾಗಿದೆ.

ಮರಳು ದಂಧೆ ತಡೆಯಲು ವಿಫಲರಾದವರ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ

‘‘ಯಾವುದೇ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ತಡೆಯುವಲ್ಲಿ ವಿಫಲವಾದರೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು. ಜೊತೆಗೆ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಮತ್ತು ಕಾನೂನು ಲೋಪವಾಗದಂತೆ ಕಣ್ಗಾವಲು ಇರಿಸುವುದು ಸರ್ಕಾರದ ಆದ್ಯತೆಯಾಗಿದೆ’’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:45 pm, Mon, 27 July 26

Source link

Leave a Reply

Your email address will not be published. Required fields are marked *