ಬೆಂಗಳೂರು (ಜನವರಿ.21): ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರು
ಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಕಾನೂನು ಸಚಿವ ಎಚ್ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಭಾಷಣದಲ್ಲಿರುವ ಕೆಲ ಅಂಶಗಳನ್ನ ಕೈಬಿಡುವಂತೆ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಯುಪಿಎ ಕಾಲದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ’ (MGNREGA) ಹೆಸರನ್ನು ಬದಲಿಸಿ, ‘ವಿಬಿ-ಜಿ ರಾಮ್ ಜಿ’ (VB-G RAM G) ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ತೀವ್ರವಾಗಿ ವಿರೋಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರದ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಅಷ್ಟೇ ಅಲ್ಲದೆ, ಅಧಿವೇಶನದಲ್ಲಿ ರಾಜ್ಯಪಾಲರು ಓದಬೇಕಿರುವ ಭಾಷಣದ ಪ್ರತಿಯಲ್ಲಿ ಕೇಂದ್ರ ಸರ್ಕಾರಕ್ಕೆ ಮುಜುಗುರ ತರುವಂತಹ ಅಂಶಗಳನ್ನು ಸೇರಿಸಲಾಗಿದೆ ಎನ್ನಲಾಗಿದೆ. ಕೋರ್ಟ್ಗೆ ಹೋಗಿ ಬರ ಪರಿಹಾರ, ನೆರೆ ಪರಿಹಾರ ಪಡೆಯಲಾಗಿದೆ ಎನ್ನುವ ವಿಚಾರ ಭಾಷಣದಲ್ಲಿ ಉಲ್ಲೇಖಿಸಿದ್ದು, ಇದಕ್ಕೆ ರಾಜ್ಯಪಾಲರು ಆಕ್ಷೇಪಿಸಿದ್ದಾರೆ. 11 ಪ್ಯಾರಾಗಳನ್ನು ಕೈಬಿಡಬೇಕೆಂದು ಸಹ ರಾಜ್ಯಪಾಲರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.