ಬೆಂಗಳೂರು, ಜುಲೈ 08: ಇಂದಿರಾ ಕಿಟ್ ನೀಡಲು ಟೆಂಡರ್ ಅಂತಿಮ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಇಂದಿರಾ ಕಿಟ್ ಅನ್ನು ವಿನ್ಯಾಸಗೊಳಿಸಲಾಗಿದೆ. ಬೇಳೆ, ಎಣ್ಣೆ, ಸಕ್ಕರೆ ಮತ್ತು ಉಪ್ಪನ್ನು ಒಳಗೊಂಡಿರುತ್ತದೆ. ಅಕ್ಕಿ ವಿತರಣೆಯಲ್ಲಿ ಎದುರಾಗುತ್ತಿದ್ದ ಕೆಲವು ಸಮಸ್ಯೆಗಳನ್ನು ನಿವಾರಿಸುವ ದೃಷ್ಟಿಯಿಂದ ಈ ಬದಲಾವಣೆ ತರಲಾಗಿದೆ. ಉತ್ತರ ಕರ್ನಾಟಕದಂತಹ ಪ್ರದೇಶಗಳಲ್ಲಿ ಜೋಳ ಹೆಚ್ಚು ಬಳಕೆಯಲ್ಲಿದ್ದು, ಅಕ್ಕಿ ಬಳಕೆಯಾಗದೆ ಕಾಳಸಂತೆ ಸೇರುತ್ತಿತ್ತು ಎಂದರು. ಇಂದಿರಾ ಕಿಟ್ ಮೂಲಕ ಕುಟುಂಬಗಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ತಲುಪಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದು ಮಕ್ಕಳು, ಗರ್ಭಿಣಿ ಸ್ತ್ರೀಯರು ಮತ್ತು ಬಾಣಂತಿಯರು ಸೇರಿದಂತೆ ಎಲ್ಲರಿಗೂ ಪ್ರಯೋಜನಕಾರಿಯಾಗಲಿದೆ. 5 ಕೆಜಿ ಅಕ್ಕಿಯ ಬದಲಿಗೆ ಈ ಕಿಟ್ ನೀಡುವುದರಿಂದ ಅದು ಸಮರ್ಪಕವಾಗಿ ಬಳಕೆಯಾಗುತ್ತದೆ ಮತ್ತು ಕುಟುಂಬಗಳ ಪೌಷ್ಟಿಕಾಂಶ ಭದ್ರತೆಗೆ ಸಹಕಾರಿಯಾಗಲಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
