
ಬೆಂಗಳೂರು, ಮಾ.25: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಮತ್ತು ಶಾಸನಾತ್ಮಕ ಕರ್ತವ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರೀವರಿಗಳಿಗೆ ಗ್ರಾಹಕರು ಪ್ರವೇಶಿಸುವಾಗಲೇ ಅವರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಸರಬರಾಜು ಮಾಡುವ ಸಂದರ್ಭದಲ್ಲೂ ಸಿಬ್ಬಂದಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ.
“ಅಪ್ರಾಪ್ತರಿಗೆ ಮದ್ಯ ನೀಡಲಾಗುವುದಿಲ್ಲ” ಎಂಬ ಎಚ್ಚರಿಕೆ ಫಲಕಗಳನ್ನು ಪ್ರತಿಯೊಂದು ಬ್ರೀವರಿಯಲ್ಲಿ ಎದ್ದು ಕಾಣುವಂತೆ ಹಾಕಿರಬೇಕು. ಅಪ್ರಾಪ್ತರು ಬ್ರೀವರಿಗಳ ಒಳಗೆ ಕದ್ದುಮುಚ್ಚಿ ಮದ್ಯಪಾನ ಮಾಡಿದರೂ ಸಹ, ಅದಕ್ಕೆ ಅಲ್ಲಿನ ಆಡಳಿತ ಮಂಡಳಿಯೇ ಸಂಪೂರ್ಣ ಹೊಣೆಯಾಗುತ್ತದೆ. ಈ ಜವಾಬ್ದಾರಿಯಿಂದ ಮಾಲೀಕರು ನುಣುಚಿಕೊಳ್ಳಲು ಸಾಧ್ಯವಿಲ್ಲ.
ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ
ರಾಜರಾಜೇಶ್ವರಿ ನಗರದ ಬ್ರೀವರಿ ಮಾಲೀಕ ವಿ. ಚಿಟ್ಟಿಬಾಬು ವಿರುದ್ಧ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಮದ್ಯಪಾನದಿಂದ ಅಪ್ರಾಪ್ತರನ್ನು ಕಾಪಾಡುವುದು ಸಮಾಜದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ