ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿ ಮಹತ್ವದ ಚರ್ಚೆ
ನವದೆಹಲಿ, ಏಪ್ರಿಲ್ 25: ಡಿ.ಕೆ. ಶಿವಕುಮಾರ್ (DK Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿ ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆ ಭೂಮಿಯನ್ನು ಒದಗಿಸುವಂತೆ ಹಾಗೂ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ಎತ್ತರದ ನಿರ್ಬಂಧಗಳನ್ನು ಸಡಿಲಿಸುವಂತೆ ಮನವಿ ಸಲ್ಲಿಸಿದ್ದಾರೆ.
ನಿರ್ಬಂಧ ಸಡಿಲಗೊಳಿಸುವಂತೆ ಕೋರಿಕೆ
ನವದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರದ ವೇಗವಾದ ಅಭಿವೃದ್ಧಿಗೆ ಕೆಲವು ರಕ್ಷಣಾ ನೀತಿಗಳು ಅಡ್ಡಿಯಾಗುತ್ತಿರುವ ಬಗ್ಗೆ ಶಿವಕುಮಾರ್ ವಿವರಿಸಿದ್ದಾರೆ. ವಿಶೇಷವಾಗಿ ಹೆಚ್ಎಎಲ್ ವಿಮಾನ ನಿಲ್ದಾಣ ಹಾಗೂ ಯಲಹಂಕ ವಾಯುನೆಲೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನೀಡಲಾಗುತ್ತಿರುವ ನಿರಾಕ್ಷೇಪಣಾ ಪತ್ರ (NOC) ಪ್ರಕ್ರಿಯೆಯಲ್ಲಿ ಕಠಿಣ ನಿಯಮಗಳನ್ನು ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳ ಸಡಿಲಿಕೆ, ಅವಳಿ ಸುರಂಗ ಮಾರ್ಗ, ರೋಟರಿ ಮೇಲ್ಸೇತುವೆ ಸೇರಿದಂತೆ ವಿವಿಧ ಯೋಜನೆ ಜಾರಿಗೆ ರಕ್ಷಣಾ ಇಲಾಖೆ ಜಾಗಗಳನ್ನು ನೀಡುವಂತೆ ಹಾಗೂ ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.
ವಿವಿಧ ಯೋಜನೆ ಜಾರಿಗೆ ಬೇಕಿದೆ ರಕ್ಷಣಾ ಇಲಾಖೆ ಜಾಗ
ಬೆಂಗಳೂರಿನಲ್ಲಿ ಸಂಚಾರಿ ದಟ್ಟಣೆ ನಿವಾರಣೆಗೆ ಕೈಗೊಂಡಿರುವ ವಿವಿಧ ಯೋಜನೆಗಳಿಗೆ ಅಗತ್ಯವಿರುವ ರಕ್ಷಣಾ ಇಲಾಖೆ ಜಾಗ ನೀಡುವ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.ಬೆಂಗಳೂರು ಸಂಚಾರ ದಟ್ಟಣೆಗೆ ಪರಿಹಾರವಾಗಿ ರೂಪಿಸಲಾಗಿರುವ ಅವಳಿ ಸುರಂಗ ಯೋಜನೆಗೆ ಹೆಬ್ಬಾಳದ ಬಳಿ 2.039 ಎಕರೆ ಜಾಗ ಅಗತ್ಯವಿದೆ. ಬೈಯ್ಯಪ್ಪನ ಹಳ್ಳಿ ರೈಲ್ವೆ ಜಂಕ್ಷನ್ ಗೆ ಸಂಪರ್ಕ ಸಾಧಿಸುವ ರೋಟರಿ ಮೇಲ್ಸೇತುವೆಗೆ 1.197 ಎಕರೆ ಜಾಗ ಅಗತ್ಯವಿದೆ. ಏರ್ ಪೋರ್ಟ್ ರಸ್ತೆ (ಬಳ್ಳಾರಿ ರಸ್ತೆ)ಯಿಂದ ಸರೋವರ ಬಡಾವಣೆಗೆ ನಿರ್ಮಿಸಲು ಉದ್ದೇಶಿಸಿರುವ 60 ಅಡಿ ಸಂಪರ್ಕ ರಸ್ತೆ ಡಿಫೆನ್ಸ್ ಡೈರಿ ಫಾರ್ಮ್ ಬಳಿ ಹಾದು ಹೋಗಲಿದೆ. ಈ ಯೋಜನೆಗೆ ಬಳಕೆಯಾಗುವ ಜಾಗಕ್ಕೆ ಬದಲಿ ಜಾಗ ನೀಡಿ ಸಹಕರಿಸಬೇಕೆಂಬ ಮನವಿಗಳನ್ನು ಸಚಿವರ ಮುಂದಿಟ್ಟಿದ್ದಾರೆ.
ಲೋವರ್ ಆಗರಂ ರಸ್ತೆಯ ಸರ್ಕಾರಿ ಆಸ್ಪತ್ರೆಯಿಂದ ಸರ್ಜಾಪುರ ರಸ್ತೆ ಮಾರ್ಗವಾಗಿ ಈಜಿಪುರ ಜಂಕ್ಷನ್ ವರೆಗೂ 24 ಮೀಟರ್ ರಸ್ತೆ ನಿರ್ಮಾಣಕ್ಕೆ 13.709 ಎಕರೆ ಜಾಗದ ಅಗತ್ಯವಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಈ ಎಲ್ಲಾ ಜಾಗವನ್ನು ತ್ವರಿತವಾಗಿ ಹಸ್ತಾಂತರ ಮಾಡಬೇಕಾಗಿದೆ. ಈ ಜಾಗಗಳ ಹಸ್ತಾಂತರದಿಂದ ರಕ್ಷಣಾ ಇಲಾಖೆ ಕಾರ್ಯಚರಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಹೀಗಾಗಿ ಈ ಜಾಗಗಳನ್ನು ಸಮಾನ ಮೌಲ್ಯ ಭೂಮಿ (EVL) ಅಥವಾ ಸಮಾನ ಮೌಲ್ಯ ಮೂಲಸೌಕರ್ಯ (EVI) ನೀತಿ ಅಡಿಯಲ್ಲಿ ಹಸ್ತಾಂತರ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದು ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಮನವಿ ಪತ್ರದಲ್ಲೇನಿದೆ?
ರಕ್ಷಣಾ ಇಲಾಖೆಯ ಕೆಲವು ನೀತಿಗಳಿಂದ ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದೆ. ಬೆಂಗಳೂರಿನ ರಕ್ಷಣಾ ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಮಾನ ನಿಲ್ದಾಣದ ಅಧಿಕಾರಿಗಳು ವಿಪರೀತ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ. ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೆಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ ಹೆಚ್ಚುವರಿಯಾಗಿ ವಿಧಿಸಲಾಗಿರುವ ನಿರ್ಬಂಧಗಳು ಈ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಈ ವಿಚಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗಳು, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ ಕಾರ್ಯದರ್ಶಿಗಳು ಹಾಗೂ ರಕ್ಷಣಾ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯಲಾಗಿದೆ. ವಿಮಾನ ಸುರಕ್ಷತೆ ಹಾಗೂ ನಗರದ ಅಭಿವೃದ್ಧಿ ಎರಡರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರಿಶೀಲನೆ ನಡೆಸಿ, ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಂದು ಡಿಸಿಎಂ ಮನವಿ ಮಾಡಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗೆ ಇರುವ ನಿರ್ಬಂಧಗಳ ಕುರಿತು ವಿವರಿಸಿರುವ ಡಿಸಿಎಂ
ಬೆಂಗಳೂರಿನಲ್ಲಿ ನಾಲ್ಕು ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಹೆಚ್ಎಎಲ್ ಹಾಗೂ ಯಲಹಂಕ ವಾಯುನೆಲೆ ರಕ್ಷಣಾ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು ವಿಮಾನ ನಿಲ್ದಾಣ ಅಧಿಕಾರಿಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತಲ 15 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರದ ಮಿತಿಯನ್ನು 150 ಮೀ. ನಿಗದಿಪಡಿಸಲಾಗಿದೆ ಎಂದು ಜಿ.ಎಸ್.ಆರ್ 751 (ಇ) ನಿಯಮದಲ್ಲಿ ಸೂಚಿಸಲಾಗಿದೆ. ಆದರೆ ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳು ಈ ವಿಪರೀತ ನಿರ್ಬಂಧ ಹೇರುವುದರ ಜತೆಗೆ 150 ಮೀ. ಎತ್ತರದ ಮಿತಿಯನ್ನು 15 ಕಿ.ಮೀ ಮೀರಿ 20 ಕಿ.ಮೀ ವರೆಗೂ ವಿಸ್ತರಿಸಿವೆ. ಈ ನಿರ್ಬಂಧಗಳು ಈ ಬೆಂಗಳೂರು ನಗರದ ಪ್ರಗತಿಗೆ ಮಾರಕವಾಗಿವೆ ಎಂದು ಡಿ ಕೆ ಶಿವಕುಮಾರ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
