Headlines

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು? – Kannada News

ಬೆಂಗಳೂರು, (ಜೂನ್ 04): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಡಿ.ಕೆ. ಶಿವಕುಮಾರ್ (DK Shivakumar) ಅವರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ ಮೂಡಿಸುತ್ತಿವೆ. ರಾಜಕೀಯ ತಂತ್ರಗಾರಿಕೆಯಲ್ಲಿ ಸೈ ಎನಿಸಿಕೊಂಡಿರುವ ಡಿಕೆಶಿ, ಇದೀಗ ಒಂದೊಳ್ಳೆ ಆಡಳಿತ ನೀಡಲು ತಮ್ಮದೇ ನೀಲನಕ್ಷೆ ಹಾಕಿಕೊಂಡಿದ್ದು, ಅದಕ್ಕೆ ತಕ್ಕಂತೆ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 04) ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಕಾನೂನು ಸುವವ್ಯಸ್ಥೆ ಹಾಗೂ ಭ್ರಷ್ಟಾಚಾರ ಬಗ್ಗೆ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಪಾರದರ್ಶಕವಾಗಿ ಕೆಲಸ ಮಾಡುವಂತೆ ಸೂಚನೆ

ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ಅದಕ್ಕೆ ತಕ್ಕಂತೆ ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿಯನ್ನು 25 ದಿನದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಪಾರದರ್ಶಕವಾಗಿ ಕೆಲಸ ಮಾಡುವಂತೆ ತಿಳಿಸಿದ್ದಾರೆ.

ಜನ ಮೆಚ್ಚುವಂತಹ ಆಡಳಿತ ನೀಡುವುದು, ಸಾರ್ವಜನಿಕರ ಸಂಕಷ್ಟಗಳನ್ನು ಬಗೆಹರಿಸುವುದು, ಮತ್ತು ಅಭಿವೃದ್ಧಿಯನ್ನು ಸುಗಮಗೊಳಿಸುವುದು ತಮ್ಮ ಸರ್ಕಾರದ ಮುಖ್ಯ ಉದ್ದೇಶ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಪಾತ್ರವನ್ನು ಅವರು ಮನವರಿಕೆ ಮಾಡಿಕೊಟ್ಟರು. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಎಂದು ಖಡಕ್ ಆಗಿ ಹೇಳಿದ್ದಾರೆ.

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿ ಹಾದಿಗೆ ಮೆಟ್ಟಿಲಾಗಿ ಮೆಚ್ಚುವಂತೆ ಕೆಲಸ ಮಾಡಬೇಕೆಂದು ನಯವಾಗಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ನಿನ್ನೆ ಅಷ್ಟೇ ಜಾರಿಗೊಳಿಸಿದ ಆರು ಕಲ್ಯಾಣ ಯೋಜನೆಗಳನ್ನು ತಕ್ಷಣ ಜಾರಿಗೊಳಿಸುವಂತೆ ಸೂಚಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿಸಂ, ಡ್ರಗ್ಸ್ ಮತ್ತು ಜೂಜಾಟ ತಡೆಗಟ್ಟಲು ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಬೇಕೆಂಬುದು ನಮ್ಮ ಗುರಿ

ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಬೇಕೆಂಬುದು ನಮ್ಮ ಗುರಿಯಾಗಿದ್ದು, ನಾವೆಲ್ಲಾ ಸೇರಿ ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಬೇಕು. ಯಾವುದೇ ಒತ್ತಡಕ್ಕೆ ಮಣಿಯದೇ ಮಂತ್ರಿಗಳು, ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳು 15 ದಿನದಲ್ಲಿ ಆ್ಯಕ್ಷನ್ ಪ್ಲ್ಯಾನ್ ಮಾಡಬೇಕು.ಎಲ್ಲ ಕೆಲಸಗಳನ್ನು ಪಾಸಿಟಿವ್ ಆಗಿ ಕಾರ್ಯನಿರ್ವಹಿಸಬೇಕು. ನನಗೆ ಹಿಸ್ಟರಿ ಬರೆಯೋಕೆ, ಓದೋಕೆ ಇಷ್ಟ ಇಲ್ಲ. ಇತಿಹಾಸ ನಿರ್ಮಾಣ ಮಾಡಬೇಕು, ಸಾಕ್ಷಿ ಗುಡ್ಡೆ ಇರಬೇಕು ಎಂದಿದ್ದಾರೆ.

Source link

Leave a Reply

Your email address will not be published. Required fields are marked *