Headlines

ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News

ಸೂರತ್, ಜೂನ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿರುವ ಕೆಲವು ನಿರಾಶಾವಾದಿಗಳು ಸದಾ ‘ಆತ್ಮನಿರ್ಭರ ಭಾರತ’ ಅಭಿಯಾನವನ್ನು ಲೇವಡಿ ಮಾಡುತ್ತಿದ್ದಾರೆ ಮತ್ತು ದೇಶದ ಸಂಕಲ್ಪವನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಿಡಿಕಾರಿದರು. ಇತರರ ಮೇಲೆ ಅವಲಂಬಿತವಾಗಿರುವ ದೇಶವು ಎಂದಿಗೂ ತನಗೆ ಅರ್ಹವಾದ ಅಭಿವೃದ್ಧಿಯ ಎತ್ತರವನ್ನು ತಲುಪಲು ಸಾಧ್ಯವಿಲ್ಲ ಎಂಬುದನ್ನು ಇಂತಹ ಜನರು ಮರೆತಿದ್ದಾರೆ ಎಂದು ಮೋದಿ ಟೀಕಿಸಿದರು.

ಕಳೆದ 12 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅರಾಜಕತೆ ಮತ್ತು ಅನಿಶ್ಚಿತತೆಯನ್ನು ಹರಡುವ ಮೂಲಕ ರಾಜಕೀಯ ಅವಕಾಶಗಳನ್ನು ಹುಡುಕುತ್ತಿದೆ. ಆದರೆ, ದೇಶದ ಜನರು ಅವರಿಗೆ ಪದೇ ಪದೇ ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ಜವಾಹರಲಾಲ್ ನೆಹರು- ನರೇಂದ್ರ ಮೋದಿ ಅವಧಿಯ ವ್ಯತ್ಯಾಸಗಳೇನು? ಇಬ್ಬರ ನಾಯಕತ್ವದ ಅವಲೋಕನ ಇಲ್ಲಿದೆ

“ಗುಜರಾತ್‌ನ ಜನರು ಈಗಾಗಲೇ ಕಾಂಗ್ರೆಸ್ ಅನ್ನು ಮೂಲೆಗುಂಪು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರಗಳಿರುವ ರಾಜ್ಯಗಳಲ್ಲೂ ಜನತೆ ಅವರ ದುರಾಡಳಿತದಿಂದ ಬೇಸತ್ತಿದ್ದಾರೆ. ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ, ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಇದಕ್ಕೂ ಮುನ್ನ ಹರಿಯಾಣ ಮತ್ತು ಪಂಜಾಬ್‌ನ ಜನರೂ ಕಾಂಗ್ರೆಸ್‌ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಅರಾಜಕತೆಯ ಮೂಲಕ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್‌ನ ರಾಜಕಾರಣ ಇನ್ನು ಮುಂದೆ ನಡೆಯುವುದಿಲ್ಲ” ಎಂದು ಮೋದಿ ವಾಗ್ದಾಳಿ ನಡೆಸಿದರು.

ಸಾರ್ವಜನಿಕ ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸೂರತ್‌ನಲ್ಲಿ ಸುಮಾರು 18,800 ಕೋಟಿ ರೂಪಾಯಿ ಮೌಲ್ಯದ ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *