ಬೆಂಗಳೂರು, ಆ.13: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಇಂದು (ಆಗಸ್ಟ್ 13) ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಹಾಗೂ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ಇಂದು ರಾಜ್ಯದ ಪ್ರಮುಖ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಉತ್ತರ ಕನ್ನಡ
ಉಡುಪಿ
ಶಿವಮೊಗ್ಗ
ಚಿಕ್ಕಮಗಳೂರು
ಬೆಳಗಾವಿ
ಈ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ದಿನವಿಡೀ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಮೇಲ್ಮೈ ಗಾಳಿ ಬೀಸಲಿದೆ.
ಇನ್ನು ದಕ್ಷಿಣಕನ್ನಡದಲ್ಲಿ ದಿನವಿಡೀ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಸಮುದ್ರ ಗಾಳಿ ಬೀಸಲಿದೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಸಿಡಿಲು ಹಾಗೂ ಗಂಟೆಗೆ 30 ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ಅಂಗಾಂಗ ದಾನ: ಆದರೆ ಕಿಡ್ನಿ ಕಸಿಗಾಗಿ ಇಂದಿಗೂ ವರ್ಷಗಟ್ಟಲೆ ಕಾಯಬೇಕಾದ ಸ್ಥಿತಿ
ಚಿಕ್ಕಮಗಳೂರು ಮಲೆನಾಡಿನ ಈ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಗಾಳಿ ಸಹಿತ ಧಾರಾಕಾರ ಮಳೆಯಾಗುವ ಲಕ್ಷಣಗಳಿವೆ. ಮಡಿಕೇರಿಯಲ್ಲಿ ತಂಪು ಹಾಗೂ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಹಾಸನದಲ್ಲಿ ವಾತಾವರಣ ತಂಪಾಗಿದ್ದು, ಜಿಲ್ಲಾದ್ಯಂತ ಗಂಟೆಗೆ 40-50 ಕಿ.ಮೀ ವೇಗದ ಮೇಲ್ಮೈ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
