ಹಾಸನ, ಜುಲೈ 30: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ದುಃಖದಿಂದ ಹೊರಬರಲಾಗದೆ, ಅವರ ನೆನಪಲ್ಲಿ ಕಣ್ಣೀರಿಡುತ್ತಿದ್ದಾರೆ. ಪತ್ನಿಯ ಅಗಲಿಕೆಯ ನೋವಿನಿಂದ ಹೊರಬರಲು ಸಾಧ್ಯವಾಗದೆ, ಚೆನ್ನಮ್ಮ ಸಮಾಧಿ ಬಳಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಗೌಡರಿಗೆ ಪ್ರತಿದಿನ ಧೈರ್ಯ ತುಂಬುತ್ತಿದ್ದಾರೆ. ಇಂದು (ಜುಲೈ 30) ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯವನ್ನು ಆಚರಿಸಲಾಗುತ್ತಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇಗುಲದ ತಪ್ಪಲಿನಲ್ಲಿರುವ ಸಮಾಧಿ ಬಳಿ ಈ ಕಾರ್ಯಕ್ರಮಕ್ಕೆ ಭಾರಿ ಸಿದ್ಧತೆಗಳನ್ನು ಮಾಡಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆಯಿದೆ. ಜನರಿಗೆ ಪ್ರಸಾದ ವಿತರಣೆಗೆ 16 ಕೌಂಟರ್ಗಳನ್ನು ಸ್ಥಾಪಿಸಲಾಗಿದ್ದು, ಮಹಿಳೆಯರು ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಯಾವುದೇ ನೂಕುನುಗ್ಗಲು ಆಗದಂತೆ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಕುಮಾರಸ್ವಾಮಿ ಅವರು ಸ್ವತಃ ಎಲ್ಲಾ ಸಿದ್ಧತೆಗಳನ್ನು ಪರಿಶೀಲಿಸಿದ್ದು, ಸಾವಿರಾರು ಸಿಬ್ಬಂದಿಗಳು ಆಹಾರ ತಯಾರಿಕೆಯಲ್ಲಿ ನಿರತರಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ