ಧರ್ಮೇಂದ್ರ ಪ್ರಧಾನ್ Image Credit source: tv9 kannada
ದೆಹಲಿ, ಜುಲೈ 25: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಸಾಕಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಹೀಗಾಗಿ ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ತಾರಕಕ್ಕೇರಿತ್ತು. ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ ಪಟ್ಟು ಹಿಡಿದಿತ್ತು. ಇದೆಲ್ಲದರ ಬೆನ್ನಲ್ಲೇ ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಹಾಗಾದರೆ ಈ ಧರ್ಮೇಂದ್ರ ಪ್ರಧಾನ್ ಯಾರು, ಅವರು ರಾಜಕೀಯಕ್ಕೆ ಆಗಮಿಸಿದ್ದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜನನ ಮತ್ತು ಶಿಕ್ಷಣ
ಒಡಿಶಾದ ಅಂಗುಲ್ ಜಿಲ್ಲೆಯ ತಾಲ್ಚೇರ್ ಎಂಬಲ್ಲಿ 26 ಜೂನ್ 1969 ಧರ್ಮೇಂದ್ರ ಪ್ರಧಾನ್ ಜನಿಸಿದರು. ಮಾಜಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದ ಡಾ. ದೇವೇಂದ್ರ ಪ್ರಧಾನ್ ಇವರ ತಂದೆ, ತಾಯಿ ಬಸಂತ ಮಂಜರಿ ಪ್ರಧಾನ್. ಒಡಿಶಾದ ತಾಲ್ಚೇರ್ ಕಾಲೇಜಿನಲ್ಲಿ ತಮ್ಮ ಪದವಿ ಶಿಕ್ಷಣ ಮುಗಿಸಿದ ಧರ್ಮೇಂದ್ರ, ಭುವನೇಶ್ವರದ ಪ್ರಸಿದ್ಧ ಉತ್ಕಲ್ ವಿಶ್ವವಿದ್ಯಾಲಯದಿಂದ ಮಾನವಶಾಸ್ತ್ರದಲ್ಲಿ (MA in Anthropology) ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ರಾಜಕೀಯ ಪ್ರವೇಶ
ಧರ್ಮೇಂದ್ರ ಪ್ರಧಾನ್ ವಿದ್ಯಾರ್ಥಿ ದೆಸೆಯಲ್ಲೇ ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು. 1983ರಲ್ಲಿ ತಾಲ್ಚೇರ್ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಾಗಿ ವಿದ್ಯಾರ್ಥಿ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ಕಾಲೇಜು ಯೂನಿಯನ್ ಅಧ್ಯಕ್ಷರಾಗಿ ಹಾಗೂ ಎಬಿವಿಪಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
ಇದನ್ನೂ ಓದಿ: Dharmendra Pradhan: ಸಿಜೆಪಿ ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
2000ರಲ್ಲಿ ಒಡಿಶಾದ ಪಲ್ಲಹರಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಸಕ್ರಿಯ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. 2002-03ರಲ್ಲಿ ‘ಉತ್ತಮ ಶಾಸಕ’ ಪ್ರಶಸ್ತಿಗೂ ಭಾಜನರಾಗಿದ್ದರು. ಇನ್ನು 2004ರಲ್ಲಿ ಒಡಿಶಾದ ದೇವರಾಜ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದರು. ನಂತರ ಬಿಹಾರ ಹಾಗೂ ಮಧ್ಯಪ್ರದೇಶಗಳಿಂದ ರಾಜ್ಯಸಭಾ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದರು. 2024ರಲ್ಲಿ ಒಡಿಶಾದ ಸಂಬಲ್ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದರು.
ಧರ್ಮೇಂದ್ರ ಪ್ರಧಾನ್ ನಿರ್ವಹಿಸಿದ ಪ್ರಮುಖ ಖಾತೆಗಳು
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಧರ್ಮೇಂದ್ರ ಪ್ರಧಾನ್ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ್ದಾರೆ. 2014 ರಿಂದ 2021ರವರಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿದ್ದರು. 2017ರಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ, 2019ರಿಂದ 2021 ಉಕ್ಕು ಸಚಿವ ಮತ್ತು 2021ರಿಂದ 2026 ಜುಲೈ 25ರವರೆಗೆ ಕೇಂದ್ರ ಶಿಕ್ಷಣ ಸಚಿವರಾಗಿದ್ದರು.
1996ರಲ್ಲಿ ಪೇಪರ್ ಲೀಕ್ ವಿರುದ್ಧ ಹೋರಾಟ ಮಾಡಿದ್ದ ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್ ಸುಮಾರು ಮೂರು ದಶಕಗಳ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧವೇ ಭಾರೀ ಪ್ರತಿಭಟನೆ ಮಾಡಿದ್ದರು. 1996ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ 27 ವರ್ಷದ ಧರ್ಮೇಂದ್ರ ಪ್ರಧಾನ್, ಒಡಿಶಾದ ಜೆ.ಬಿ. ಪಟ್ನಾಯಕ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಒಡಿಶಾ ಅಸೆಂಬ್ಲಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದರು.
ಈ ವೇಳೆ ಪೊಲೀಸರು ನಡೆಸಿದ ಭೀಕರ ಲಾಠಿಚಾರ್ಜ್ನಲ್ಲಿ ಧರ್ಮೇಂದ್ರ ಸೇರಿದಂತೆ ನೂರಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಈ ಐತಿಹಾಸಿಕ ಪ್ರತಿಭಟನೆಯ ನಂತರ ಒಡಿಶಾ ಸರ್ಕಾರವು ಮಹತ್ವದ ಪರೀಕ್ಷಾ ಸುಧಾರಣೆಗಳನ್ನು ತಂದಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.