ಉಡುಪಿ, ಏಪ್ರಿಲ್ 22: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅತ್ತಿಕೋಣೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸುಮಾರು 75ಕ್ಕೂ ಹೆಚ್ಚು ಕುಟುಂಬಗಳು ಜೀವಜಲಕ್ಕಾಗಿ ಪರದಾಡುತ್ತಿವೆ. ಇಲ್ಲಿನ ನಿವಾಸಿಗಳು ಪ್ರತಿದಿನ ಸೌಪರ್ಣಿಕಾ ನದಿ ದಾಟಿ ದೋಣಿಯ ಮೂಲಕ ನೀರು ತರುವ ಅನಿವಾರ್ಯತೆಯನ್ನು ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಈ ನೀರಿನ ಸಮಸ್ಯೆ ಗ್ರಾಮವನ್ನು ಕಾಡುತ್ತಿದೆ. ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸಲು ವಿಫಲರಾಗಿದ್ದಾರೆ. ಟ್ಯಾಂಕ್ ನಿರ್ಮಾಣ, ಬಂಟವಾಡಿಯಲ್ಲಿ ಸಿಹಿನೀರಿನ ಡ್ಯಾಂ ನಿರ್ಮಾಣ ಮತ್ತು ಹೊಳೆ ನೀರು ಶುದ್ಧೀಕರಿಸುವ ಯೋಜನೆಗಳು ಕಾರ್ಯರೂಪಕ್ಕೆ ಬಂದಿದ್ದರೂ, ಅಸಮರ್ಪಕ ನಿರ್ವಹಣೆಯಿಂದಾಗಿ ಸಂಪೂರ್ಣವಾಗಿ ವಿಫಲವಾಗಿವೆ. ಡ್ಯಾಂನಲ್ಲಿ ಉಪ್ಪುನೀರು ಬೆರೆತು, ಶುದ್ಧೀಕರಣ ಘಟಕದಿಂದ ಸಮರ್ಪಕ ನೀರು ಪೂರೈಕೆಯಾಗದೆ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ.
ಪ್ರತಿದಿನ ಬೆಳಗ್ಗೆ ಮಹಿಳೆಯರು ಅಪಾಯಕಾರಿ ದೋಣಿ ಪ್ರಯಾಣದ ಮೂಲಕ ನೀರು ತರಬೇಕಾದ ಪರಿಸ್ಥಿತಿ ಇದೆ. ಮಾರ್ಚ್ನಿಂದ ಮೇ ತಿಂಗಳವರೆಗೆ ಈ ಸಮಸ್ಯೆ ಇನ್ನಷ್ಟು ಉಲ್ಬಣಿಸುತ್ತದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ