ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google
ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ, ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ ಪ್ರತಿಯೊಬ್ಬರ ಕಾಳಜಿಯೂ ನಮ್ಮ ಗಮನದಲ್ಲಿದೆ ಎಂದವರು ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
I take serious note of the ongoing protests by government job aspirants in Dharwad. I understand the anxiety, frustration, and uncertainty that many of our government job aspirants are experiencing. Behind every application is a dream, a family’s hope, years of hard work, and an… pic.twitter.com/ykWvLFG66k
— Siddaramaiah (@siddaramaiah) February 24, 2026
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ನಾವು ಅಧಿಕಾರ ಸ್ವೀಕರಿಸಿದಾಗ 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಾಗಿದ್ದವು. ಇದು ಕೇವಲ ಒಂದೇ ದಿನಕ್ಕೆ ಉಂಟಾದ ಸಮಸ್ಯೆಯಲ್ಲ. ಹಿಂದಿನ ಬಿಜೆಪಿ ಸರ್ಕಾರದ ದೀರ್ಘಕಾಲದ ನಿರ್ಲಕ್ಷ್ಯದಿಂದಾಗಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸಮರ್ಪಕ ಯೋಜನೆ ರೂಪಿಸದೇ ಇದ್ದದ್ದರಿಂದ ಸಮಸ್ಯೆ ಉಂಟಾಗಿದೆ. ಹೀಗಿದ್ದರೂ ಬಿಜೆಪಿ ನಾಯಕರು ವಿದ್ಯಾರ್ಥಿಗಳನ್ನು ತಪ್ಪುದಾರಿಗೆಳೆಯಲು ಪ್ರಯತ್ನಿಸುತ್ತಿರುವುದು ಅತ್ಯಂತ ವಿಷಾದನೀಯ. ಉದ್ಯೋಗಾರ್ಥಿಗಳನ್ನು ತಮ್ಮ ಭವಿಷ್ಯದ ಸಿದ್ಧತೆಯತ್ತ ಗಮನ ಹರಿಸಲು ಪ್ರೋತ್ಸಾಹಿಸುವ ಬದಲು, ಅಶಾಂತಿ ಉಂಟುಮಾಡಲು ಯತ್ನಿಸುತ್ತಿದ್ದಾರೆ. 2019ರಿಂದ 2023ರ ನಡುವೆ ನಡೆದ ನೇಮಕಾತಿ ಅಕ್ರಮಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳು ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಕುಗ್ಗಿಸಿದೆ. ಖಾಲಿ ಹುದ್ದೆಗಳ ನೇಮಕ ವಿಚಾರದಲ್ಲೂ ಹಿನ್ನೆಡೆಗೆ ಕಾರಣವಾಗಿದೆ. ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವಾಸಾರ್ಹತೆ, ಪಾರದರ್ಶಕತೆ ಪುನಃ ಸ್ಥಾಪಿಸಲು ಬದ್ಧವಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ; ವಿಪಕ್ಷ ನಾಯಕ ಅಶೋಕ್ ಸ್ಫೋಟಕ ಆರೋಪ
ಅಲ್ಲದೆ, ಆಂತರಿಕ ಮೀಸಲಾತಿ ಕುರಿತಂತೆ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದ್ದ ಕಾರಣ ಕೆಲವು ನೇಮಕಾತಿ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಯಿತು. ಸಂವಿಧಾನಬದ್ಧತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧವಾದ ಸರ್ಕಾರವಾಗಿ, ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ನಿರ್ಧಾರಗಳನ್ನು ತುರ್ತಾಗಿ ತೆಗೆದುಕೊಳ್ಳುವ ಬದಲು ಕಾನೂನು ಚೌಕಟ್ಟಿನೊಳಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಲು ನಾವು ತೀರ್ಮಾನಿಸಿದ್ದೇವೆ. ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ. ಹಲವು ವರ್ಷಗಳಿಂದ ವಿಳಂಬದಿಂದ ಬಳಲುತ್ತಿರುವ ಅಭ್ಯರ್ಥಿಗಳ ಸಂಕಷ್ಟವನ್ನು ಮನಗಂಡು, ಮುಂದಿನ ನೇಮಕಾತಿಗಳಲ್ಲಿ ವಯೋಮಿತಿ ಮಿತಿಯನ್ನು 5 ವರ್ಷಕ್ಕಿಂತ ಹೆಚ್ಚು ಸಡಿಲಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಉಳಿದಿರುವ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವೇಗವಾಗಿ ಮತ್ತು ಪಾರದರ್ಶಕವಾಗಿ ನಡೆಸುವ ಭರವಸೆಯನ್ನು ನೀಡುತ್ತಿದ್ದು, ಮುಂದಿನ ವರ್ಷಗಳಲ್ಲಿ ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆತ್ಮವಿಶ್ವಾಸ ಮತ್ತು ಸಹನೆಯೊಂದಿಗೆ ನಿಮ್ಮ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಿದ್ಧತೆಯತ್ತ ಗಮನ ಹರಿಸಿ. ಕರ್ನಾಟಕದ ಯುವಕರು ನಮ್ಮ ಭವಿಷ್ಯದ ಶಿಲ್ಪಿಗಳು. ನಿಮ್ಮ ಪರಿಶ್ರಮ ನಮಗೆ ಪ್ರೇರಣೆ. ನನ್ನ ಸರ್ಕಾರ ನಿಮ್ಮೊಂದಿಗೆ ಮಾತಿನಲ್ಲಿ ಮಾತ್ರವಲ್ಲ, ಕಾರ್ಯದಲ್ಲಿಯೂ ದೃಢವಾಗಿ ನಿಂತಿದೆ ಎಂದು ಸಿಎಂ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
