ನವದೆಹಲಿ, ಜುಲೈ 28: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ಸರ್ಕಾರ ಹಿಂಪಡೆಯದಿದ್ದಲ್ಲಿ ದೇಶಾದ್ಯಂತ ಹೊಸ ಹಂತದ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಸಿಜೆಪಿ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳುತ್ತಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ CJP ವಕ್ತಾರ ಸೌರವ್ ದಾಸ್, “ದೇಶಾದ್ಯಂತ ನಡೆಯುತ್ತಿದ್ದ ಹೋರಾಟವನ್ನು ಹಿಂಪಡೆಯಲು ನೀಡಿದ್ದ ಭರವಸೆಗಳನ್ನು ಈಡೇರಿಸುವ ಸಮಯ ಕೇಂದ್ರ ಸರ್ಕಾರಕ್ಕೆ ಬಂದಿದೆ” ಎಂದು ಹೇಳಿದ್ದಾರೆ.
“ಭಾರತ ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸಲು ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳುತ್ತಿದೆ. ನಾವು ನೀಡಿರುವ ಪ್ರತಿಯೊಂದು ಭರವಸೆಯನ್ನು ಈಡೇರಿಸುವಂತೆ ಸರ್ಕಾರವನ್ನು ಮತ್ತೊಮ್ಮೆ ಆಗ್ರಹಿಸುತ್ತೇವೆ. ಎಫ್ಐಆರ್ಗಳನ್ನು ಹಿಂಪಡೆಯಿರಿ, ಪ್ರತಿಭಟನಾಕಾರರ ವಿರುದ್ಧ ಭವಿಷ್ಯದಲ್ಲಿ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳದಂತೆ ನೋಡಿಕೊಳ್ಳಿ. ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕಾರಣವಾದ ಒಪ್ಪಂದವನ್ನು ಗೌರವಿಸಿ. ಅದಕ್ಕೆ ತಪ್ಪಿದರೆ ನಾವು ಈಗಾಗಲೇ ಘೋಷಿಸಿದಂತೆ ಈ ದೇಶದ ಭವಿಷ್ಯಕ್ಕಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳು ಮತ್ತು ಯುವ ಪ್ರತಿಭಟನಾಕಾರರನ್ನು ರಕ್ಷಿಸಲು ಕಾಕ್ರೋಚ್ ಜನತಾ ಪಾರ್ಟಿಯು ದೇಶವ್ಯಾಪಿ ಪ್ರತಿಭಟನೆಯನ್ನು ಪುನರಾರಂಭಿಸುವುದನ್ನು ಬಿಟ್ಟು ಬೇರೆ ವಿಧಿಯಿಲ್ಲ” ಎಂದು ದಾಸ್ ಹೇಳಿದ್ದಾರೆ.
#WATCH | Delhi | Cockroach Janta Party Chief Spokesperson Saurav Das says, “The government gave us a guarantee that all FIRs filed against students and protesters so far would be withdrawn and that no action would be taken against any protester in the future, not just in Delhi,… pic.twitter.com/CVGFBkDXQu
— ANI (@ANI) July 28, 2026
ಇದನ್ನೂ ಓದಿ: ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ
ಹಾಗೇ, ಸರ್ಕಾರ ಕೊಟ್ಟ ಮಾತಿಗೆ ತಪ್ಪಿರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಎಚ್ಚರಿಕೆ ನೀಡಿದ್ದಾರೆ. “ಪೊಲೀಸರಿಂದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕಿರುಕುಳ ಹೀಗೆಯೇ ಮುಂದುವರಿದರೆ, ಕಾಕ್ರೋಚ್ ಜನತಾ ಪಾರ್ಟಿ ಶೀಘ್ರದಲ್ಲೇ ಬೃಹತ್ ಶಾಂತಿಯುತ ಪ್ರತಿಭಟನೆಯ ಮೂಲಕ ಉತ್ತರಿಸಲಿದೆ. ಸರ್ಕಾರವು ವಿದ್ಯಾರ್ಥಿಗಳನ್ನು ಗುರಿಯಾಗಿಸುವುದು ಮತ್ತು ಅವರ ಮೇಲೆ ದ್ವೇಷದ ಕ್ರಮ ಕೈಗೊಳ್ಳುವುದನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ದಿಪ್ಕೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
If the harassment of students at the hands of the police continues, the Cockroach Janta Party will respond with a massive peaceful protest soon.
The Govt must stop targeting and witch-hunting students.
— Abhijeet Dipke (@abhijeet_dipke) July 28, 2026
ದೆಹಲಿಯಲ್ಲಿ ನೀಟ್ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸರ್ಕಾರ ಉಲ್ಲಂಘಿಸಿದೆ ಎಂದು CJP ವಕ್ತಾರ ಅಶುತೋಶ್ ರಾಂಕಾ ವಾಗ್ದಾಳಿ ನಡೆಸಿದ್ದರು. “ಆತ್ಮೀಯ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೇ, ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದದ ಸಂಪೂರ್ಣ ಉಲ್ಲಂಘನೆಯನ್ನು ನಾವು ಕಾಣುತ್ತಿದ್ದೇವೆ. ಬಿಹಾರ ಮತ್ತು ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ, ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಪ್ರತಿಭಟನಾಕಾರರಿಗೆ ಸಾಮಗ್ರಿಗಳನ್ನು ನೀಡಿ ಬೆಂಬಲಿಸುತ್ತಿದ್ದ ಸ್ವಯಂಸೇವಕರನ್ನು ದೆಹಲಿಯಲ್ಲಿ ವಶಕ್ಕೆ ಪಡೆಯುತ್ತಿರುವ ಹಲವು ವರದಿಗಳು ಹೊರಬರುತ್ತಿವೆ” ಎಂದು ರಾಂಕಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ: ನೀಟ್ ಪ್ರತಿಭಟನೆ, ಬಂಧಿತ 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೊಳಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ
ಹಾಲಿ ದಾಖಲಾಗಿರುವ ಎಫ್ಐಆರ್ಗಳ ಕುರಿತು ತನಿಖೆಯನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ನ ಇತ್ತೀಚಿನ ನಿರ್ದೇಶನಗಳ ಕುರಿತೂ ಸಿಜೆಪಿ ಕಳವಳ ವ್ಯಕ್ತಪಡಿಸಿದೆ. “ಈ ನಿರ್ದೇಶನವು ಜುಲೈ 25ರಂದು ಭಾರತ ಸರ್ಕಾರವು ಈ ದೇಶದ ಯುವಜನತೆಗೆ ನೀಡಿದ ಪವಿತ್ರ ಆಶ್ವಾಸನೆ ಮತ್ತು ಭರವಸೆಗೆ ವಿರುದ್ಧವಾಗಿದೆ. ಅಂದರೆ, ಎಫ್ಐಆರ್ಗಳನ್ನು ಹಿಂಪಡೆಯಲಾಗುವುದು ಮತ್ತು ಶಾಂತಿಯುತ ಚಳವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಯಾವುದೇ ಪ್ರತಿಭಟನಾಕಾರರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಗುರಿಯಾಗಿಸುವುದಿಲ್ಲ ಎಂಬ ಭರವಸೆಗೆ ಇದು ವ್ಯತಿರಿಕ್ತವಾಗಿದೆ” ಎಂದು ಸಿಜೆಪಿ ಕಳವಳ ವ್ಯಕ್ತಪಡಿಸಿದೆ.
“ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಈ ಆದೇಶವನ್ನು ಬಳಸಿಕೊಂಡು ಭಾರತ ಸರ್ಕಾರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳು ಪ್ರತ್ಯೇಕ ಪ್ರತಿಭಟನಾಕಾರರ ವಿರುದ್ಧ ಎಫ್ಐಆರ್ಗಳನ್ನು ಮುಂದುವರಿಸಲು ಮತ್ತು ಅವರಿಗೆ ತೀವ್ರ ಕಿರುಕುಳ ನೀಡಲು ಯತ್ನಿಸಬಹುದು ಎಂಬ ಆತಂಕ ನಮಗಿದೆ,” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇನ್ನೊಂದೆಡೆ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳು ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಾಗಿ ಈಗಾಗಲೇ ಘೋಷಿಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ