ಬೆಂಗಳೂರು, (ಆಗಸ್ಟ್ 13): ಕರ್ನಾಟಕದಲ್ಲಿ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ನಿಷೇಧ (Gutkha, Pan masala Ban) ಹೇರಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾರ್ವಜನಿಕರು ಸೇರಿ ಹಲವು ರಾಜಕಾರಣಿಗಳು ಸ್ವಾಗತಿಸಿದ್ದಾರೆ. ಆದರೆ, ಮತ್ತೊಂದೆಡೆ ಇದಕ್ಕೆ ಅಡಿಕೆ ಬೆಳೆಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga jnanendra) ನೇತೃತ್ವದ ನಿಯೋಗ ಇಂದು (ಆಗಸ್ಟ್ 13) ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಬ್ಯಾನ್ ಆದೇಶ ವಾಪಸ್ ಪಡೆಯುವಂತೆ ಮನವಿ ಮಾಡಿದೆ.
ಈ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಜಾರಿಗೊಳಿಸಿರುವುದರಿಂದ ಅಡಿಕೆ ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ರಾಜ್ಯದ ಸುಮಾರು 12 ಜಿಲ್ಲೆಗಳ ಲಕ್ಷಾಂತರ ರೈತರು ಅಡಿಕೆ ಬೆಳೆಯನ್ನೇ ತಮ್ಮ ಜೀವನೋಪಾಯದ ಆಧಾರವಾಗಿಸಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಅಡಿಕೆಗೆ ಬೇಡಿಕೆ ಕುಸಿಯುವ ಆತಂಕ ಎದುರಾಗಿದ್ದು, ರೈತರ ಆರ್ಥಿಕ ಸ್ಥಿತಿಗೆ ತೀವ್ರ ಹೊಡೆತ ಬೀಳಲಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿಷೇಧದ ಕುರಿತು ಮರುಪರಿಶೀಲನೆ ನಡೆಸಿ, ಅಡಿಕೆ ಬೆಳೆಗಾರರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
