ಬೆಂಗಳೂರು, ಆಗಸ್ಟ್ 10: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಪ್ರತಿಭಟಿಸಿ (Cauvery Dispute) ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ಗೆ (Karnataka Bandh) ಇದೀಗ ಅನಿಶ್ಚಿತತೆ ಎದುರಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಸಮಸ್ಯೆ ಸದ್ಯಕ್ಕೆ ತೀವ್ರವಾಗಿಲ್ಲ ಎಂಬ ಕಾರಣ ನೀಡಿ, ಕೆಲ ಕನ್ನಡ ಪರ ಹಾಗೂ ರೈತಪರ ಸಂಘಟನೆಗಳು ಬಂದ್ನಿಂದ ಹಿಂದೆ ಸರಿಯುವ ಸೂಚನೆ ನೀಡಿವೆ.
ವಾಟಾಳ್ ನಾಗರಾಜ್ ಬಣದೊಂದಿಗೆ ಗುರುತಿಸಿಕೊಂಡಿರುವ ಸಾರಾ ಗೋವಿಂದ್, ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರು ಈಗಾಗಲೇ, ‘ಬಂದ್ಗೆ ಬೆಂಬಲ ನೀಡುವುದಿಲ್ಲ’ ಎಂದು ಹಿಂದೆ ಸರಿದಿದ್ದಾರೆ. ಪ್ರವೀಣ್ ಶೆಟ್ಟಿ ಬಣ ಕೂಡ ಬಂದ್ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಓಲಾ-ಉಬರ್ ಅಸೋಸಿಯೇಷನ್ ಬೆಂಬಲವೂ ಇಲ್ಲ
ಇನ್ನು ಓಲಾ-ಉಬರ್ ಅಸೋಸಿಯೇಷನ್ನಿಂದಲೂ ಇದುವರೆಗೆ ಬಂದ್ಗೆ ಬೆಂಬಲ ವ್ಯಕ್ತವಾಗಿಲ್ಲ. ಬಂದ್ ನಡೆಸುವುದರಿಂದ ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಹೊಡೆತ ಬೀಳುವುದಲ್ಲದೆ, ದಿನಗೂಲಿ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಿಗಳು ಹಾಗೂ ಹೋಟೆಲ್ ಉದ್ಯಮವನ್ನೇ ಅವಲಂಬಿಸಿರುವವರಿಗೆ ಸಮಸ್ಯೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಇದನ್ನೂ ಓದಿ: ಕಾವೇರಿ ಜಲ ವಿವಾದ: ಆ.13ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು
ಈ ಹಿನ್ನೆಲೆಯಲ್ಲಿ ಬಂದ್ಗೆ ಸಾರ್ವಜನಿಕ ವಲಯದಲ್ಲೂ ವಿರೋಧ ವ್ಯಕ್ತವಾಗುತ್ತಿದೆ. ಹಲವು ಸಂಘಟನೆಗಳು ಬೆಂಬಲದಿಂದ ಹಿಂದೆ ಸರಿಯುತ್ತಿರುವುದರಿಂದ ಆಗಸ್ಟ್ 13ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬಹುತೇಕ ರದ್ದಾಗುವ ಸಾಧ್ಯತೆ ಇದೆ. ಆದರೆ ಅಂತಿಮ ನಿರ್ಧಾರವನ್ನು ಸಂಘಟನೆಗಳು ಅಧಿಕೃತವಾಗಿ ಪ್ರಕಟಿಸಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
