ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರದ ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ರಾಜ್ಯದ ಶಾಶ್ವತ ಮತದಾರರನ್ನಾಗಿ ಮಾಡುವ ಹುನ್ನಾರ ಎಂದು ಅಶೋಕ್ ಆರೋಪಿಸಿದ್ದಾರೆ. ರಾಜ್ಯದಲ್ಲಿ 20 ರಿಂದ 30 ಲಕ್ಷ ಬಾಂಗ್ಲಾದೇಶೀಯರಿದ್ದಾರೆ ಎಂಬ ಮಾಹಿತಿ ಇದ್ದು, ಇವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ರೇಷನ್ ಕಾರ್ಡ್, ಆರೋಗ್ಯ ಕಾರ್ಡ್ ಮತ್ತು ಮನೆಗಳಂತಹ ಸೌಲಭ್ಯಗಳು ಲಭ್ಯವಾಗುತ್ತವೆ ಎಂದು ಅಶೋಕ್ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ಗೆ ಮತ ಹಾಕುವವರನ್ನು ಶಾಶ್ವತ ನಾಗರಿಕರನ್ನಾಗಿ ಮಾಡುವ ಪ್ರಯತ್ನ ಇದಾಗಿದೆ ಎಂದು ಅವರು ದೂರಿದ್ದಾರೆ.
ಇದು ದೇಶದ ಭದ್ರತೆಗೆ ಅಪಾಯ ತರುತ್ತದೆ ಎಂದು ಅಶೋಕ್ ಎಚ್ಚರಿಸಿದ್ದಾರೆ. ಪಿಎಫ್ಐ ಮತ್ತು ಕೆಎಫ್ಡಿ ಸಂಘಟನೆಗಳ ಉದಾಹರಣೆ ನೀಡಿದ ಅವರು, ಬಾಂಗ್ಲಾದೇಶೀಯರು ಭವಿಷ್ಯದಲ್ಲಿ ಭಯೋತ್ಪಾದಕರಾಗುವ ಸಾಧ್ಯತೆ ಇದೆ ಎಂದಿದ್ದಾರೆ. ವಿದೇಶೀಯರ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದ್ದು, ರಾಜ್ಯ ಸರ್ಕಾರಕ್ಕೆ ಪ್ರಮಾಣಪತ್ರ ನೀಡುವ ಅಧಿಕಾರವಿಲ್ಲ ಎಂದು ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಈ ನಿರ್ಧಾರವು ಅಕ್ರಮವಾಗಿದ್ದು, ದೇಶದ ಕಾನೂನುಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಕೂಡಲೇ ಈ ನಿರ್ಧಾರವನ್ನು ರದ್ದುಪಡಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದು, ರಾಜ್ಯಪಾಲರು ಸಹಾನುಭೂತಿಯಿಂದ ಆಲಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಅಶೋಕ್ ಮಾಹಿತಿ ನೀಡಿದರು.
ಕರ್ನಾಟಕ ಶಾಶ್ವತ ನಿವಾಸ ಪ್ರಮಾಣ ಪತ್ರ ಕುರಿತ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ