
ಬೆಂಗಳೂರು, ಮಾರ್ಚ್ 25: ಮಂಗಳವಾರ ಸುರಿದ ಮಳೆಯಿಂದಾಗಿ (Weather Forecast) ಹಲವೆಡೆ ಅವಾಂತಗಳು ಸೃಷ್ಟಿಯಾಗಿವೆ. ಜೋರಾದ ಗಾಳಿಗೆ ಮನೆ ಮೇಲಿನ ಸೂರು ಸಹ ಹಾರಿ ಹೋಗಿದ್ದು, ಜನರು ಕಂಗಾಲಾಗಿದ್ದಾರೆ. ಇಂದೂ ಸಹ ರಾಜ್ಯದೆಲ್ಲೆಡೆ ಗುಡುಗು ಸಹಿತ ಮಳೆಯಿರಲಿದ್ದು, ಹವಾಮಾನ ಇಲಾಖೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಜೋರು ಗಾಳಿ ಮಳೆಗೆ ಗದಗದಲ್ಲಿ ಅವಾಂತರ
ಗದಗ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾಳಿ, ಗುಡುಗು ಸಹಿತ ಮಳೆಯ ಅಬ್ಬರದಿಂದ ಹಲವು ಕಡೆ ಅವಾಂತರಗಳು ಸಂಭವಿಸಿವೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಗಾಳಿಯ ತೀವ್ರತೆಗೆ ನಾಲ್ಕಕ್ಕೂ ಹೆಚ್ಚು ಮನೆಗಳ ಮೇಲಿನ ತಗಡಿನ ಶೀಟ್ಗಳು ಹಾರಿ ಹೋಗಿ ನಿವಾಸಿಗಳಿಗೆ ಭಾರೀ ತೊಂದರೆ ಉಂಟಾಗಿದೆ. ಶೀಟ್ಗಳು ಹಾರಿದ ಪರಿಣಾಮ ಶಿವಪ್ಪ ಲಮಾಣಿ ಕಾಲಿಗೆ ಗಾಯಗೊಂಡಿದ್ದು, ಸೋಮವ್ವ ಲಮಾಣಿ ಅವರ ಕೈ ಮುರಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಗ್ರಾಮಸ್ಥರು ಪರದಾಡಿದ ಘಟನೆ ನಡೆದಿದೆ.
ಇದಲ್ಲದೆ ಭಾರಿ ಮಳೆ ಮತ್ತು ಗಾಳಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಕತ್ತಲಿನಲ್ಲಿ ಕಂಗಾಲಾಗಿದ್ದಾರೆ. ಬಿರುಗಾಳಿಯಿಂದ ಹಲವು ದೊಡ್ಡ ಮರಗಳು ಧರೆಗೆ ಉರುಳಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಸೇರಿದಂತೆ ವಾಹನಗಳು ಹಾನಿಗೊಳಗಾಗಿವೆ. ಇನ್ನೂ ಗಾಳಿ ಮತ್ತು ಮಳೆ ಮುಂದುವರಿದಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೀದರ್, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ,ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಬಳ್ಳಾರಿ, ಹಾವೇರಿ, ವಿಜಯನಗರ, ಉಡುಪಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಕೊಡಗು, ಹಾಸನ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.