ಹೀಟ್ ವೇವ್ ಬೆನ್ನಲ್ಲೇ ಆಲಿಕಲ್ಲು ಮಳೆ ಅಬ್ಬರ
ಬೆಂಗಳೂರು, ಏಪ್ರಿಲ್ 28: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ (Karnataka Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆಲಿಕಲ್ಲು ಮಳೆಯ ಅಲರ್ಟ್!
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಹೀಟ್ ವೇವ್ ಅಲರ್ಟ್ ಇತ್ತು. ಅದರ ಜೊತೆಗೆ ಸಾಧಾರಣ ಮಳೆಯೂ ಅಲ್ಲಲ್ಲಿ ಕಂಡು ಬರುತ್ತಿತ್ತು. ಆದರೆ ಇಂದು ಬಿಸಿ ಬಿಸಿಯಾಗಿದ್ದ ಕಡಲ ನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ರಭಸದಿಂದ ಸುರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಎಲ್ಲೆಡೆ ಶುಷ್ಕ ಹವಾಮಾನ ಇರಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆ ಸೇರಿದಂತೆ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಅವಾಂತರ!
ರಾಜ್ಯದಲ್ಲಿ ಬಿಸಿಲ ಬೇಗೆಯ ನಡುವೆಯೇ ವರುಣನ ಅಬ್ಬರ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ರಾಯಚೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಗೆ 200ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಹಾಗೂ ಬೃಹತ್ ಮರಗಳು ಧರೆಗುರುಳಿವೆ. ಹಲವು ಮನೆಗಳ ಮೇಲ್ಚಾವಣಿ ಹಾರಿಹೋಗಿದ್ದು, ಅಡಕೆ ತೋಟಗಳು ನಾಶವಾಗಿ ರೈತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಚಿಕ್ಕಮಗಳೂರಿನ ತರಿಕೆರೆಯಲ್ಲಿ ಮನೆಗಳ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದ್ದರೆ, ರಾಯಚೂರಿನಲ್ಲಿ ಹೆದ್ದಾರಿ ಮೇಲೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಬಿಸಿಲು ಮತ್ತು ಮಳೆಯ ಈ ದ್ವಿಮುಖ ಹೊಡೆತಕ್ಕೆ ಜನಸಾಮಾನ್ಯರು ಕಂಗೆಟ್ಟಿದ್ದು, ಸಂತ್ರಸ್ತರು ಸರ್ಕಾರದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
