ಚಾಮರಾಜನಗರ, ಫೆಬ್ರವರಿ 25: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ. ಆರತಕ್ಷತೆ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ ಕುಸಿದು ಬಿದ್ದಿದ್ದು, ಕೊನೆಯುಸಿರೆಳೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೋಟೋಗ್ರಾಫರ್ ಸಾವಿನಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.