ಹಾಸನ, (ಆಗಸ್ಟ್ 09): ಜೆಡಿಎಸ್–ಬಿಜೆಪಿ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇರುವ ಆತಂಕದಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಇದ್ದಾರೆ. ಹೀಗಾಗಿ ಅವರು ಸ್ಥಳೀಯವಾಗಿ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇಂದು (ಆಗಸ್ಟ್ 09) ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಜೊತೆ ಪಿಸು ಪಿಸು ಮಾತನಾಡಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಇದೇ ಕಾರ್ಯಕ್ರಮದಲ್ಲಿ ಶ್ರೇಯಸ್ ಪಟೇಲ್, ಪ್ರೀತಂಗೌಡ ಅವರನ್ನು ಹಾಡಿ ಹೊಗಳಿದ್ದಾರೆ. ಹೀಗಾಗಿ ಪ್ರೀತಂಗೌಡ ಕಾಂಗ್ರೆಸ್ ನತ್ತ ಮುಖ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
