ನವದೆಹಲಿ, ಜೂನ್ 10: ತೃಣಮೂಲ ಕಾಂಗ್ರೆಸ್ (TMC) ಕಾಂಗ್ರೆಸ್ ಪಕ್ಷದ ಜೊತೆ ವಿಲೀನವಾಗಲಿದೆ ಎಂಬ ಮಾತುಗಳಿಗೆ ಯಾವುದೇ ಆಧಾರವಿಲ್ಲ ಎಂದು ಟಿಎಂಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳ ನಾಯಕರ ನಡುವೆ ಇತ್ತೀಚೆಗೆ ರಾಜಕೀಯ ಚರ್ಚೆಗಳು ನಡೆದಿದ್ದರೂ ಸಹ, ವಿಲೀನದ ಯಾವುದೇ ಪ್ರಸ್ತಾಪವನ್ನು ಉಭಯ ಪಕ್ಷಗಳು ಪರಿಗಣಿಸುತ್ತಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ನಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗುತ್ತಿದೆ ಮತ್ತು ಪಕ್ಷಗಳನ್ನು ವಿಲೀನಗೊಳಿಸಲಾಗುತ್ತಿದೆ ಎಂಬ ಸುದ್ದಿಗಳು ಕೇವಲ ಊಹಾಪೋಹಗಳಾಗಿದ್ದು, ಇವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.
ಇದರ ನಡುವೆಯೂ ಕಾಂಗ್ರೆಸ್ ಮತ್ತು ಟಿಎಂಸಿ ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಸಿದ್ಧವಾಗಿವೆ. ಸಾಮಾನ್ಯ ರಾಜಕೀಯ ಹಿತಾಸಕ್ತಿಯ ವಿಷಯಗಳ ಕುರಿತು ಚರ್ಚೆಗಳನ್ನು ಮುಂದುವರಿಸಿವೆ ಎಂದು ಮೂಲಗಳು ಹೇಳಿವೆ. ವರದಿಯ ಪ್ರಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಇತ್ತೀಚೆಗೆ ತಮ್ಮ ಪಕ್ಷಗಳ ನಡುವೆ ಸಮನ್ವಯತೆಯನ್ನು ಸುಧಾರಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.
ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ
ಟಿಎಂಸಿ ಪಕ್ಷವು ದೊಡ್ಡ ಮಟ್ಟದ ಆಂತರಿಕ ಸವಾಲನ್ನು ಎದುರಿಸುತ್ತಿರುವ ಸಮಯದಲ್ಲಿಯೇ ಈ ಮಾತುಕತೆ ನಡೆದಿರುವುದು ತೀವ್ರ ಗಮನ ಸೆಳೆದಿದ್ದು, ಪಕ್ಷದ ಮುಂದಿನ ರಾಜಕೀಯ ಕಾರ್ಯತಂತ್ರದ ಬಗ್ಗೆ ಹಲವು ವಹಾಪೋಹಗಳಿಗೆ ಕಾರಣವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಕಾಂಗ್ರೆಸ್-ಟಿಎಂಸಿ ವಿಲೀನದ ವದಂತಿಗಳು ಮತ್ತಷ್ಟು ತೀವ್ರಗೊಂಡವು.
ಇದನ್ನೂ ಓದಿ: ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್
ವರದಿಗಳ ಪ್ರಕಾರ, ಟಿಎಂಸಿಯ 58 ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದಿದ್ದಾರೆ. ರಾಜ್ಯಸಭೆ ಸೇರಿದಂತೆ ಪಕ್ಷದ ಸಂಸದರಲ್ಲೂ ಅಸಮಾಧಾನದ ಲಕ್ಷಣಗಳು ಗೋಚರಿಸುತ್ತಿವೆ. ಇಂದು ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್ ಅಕೂಡ ಟಿಎಂಸಿ ಪಕ್ಷ ಮತ್ತು ರಾಜ್ಯಸಭಾ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ, ಜೂನ್ 8ರಂದು ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರಾಯ್ ಅವರು ಕೂಡ ರಾಜ್ಯಸಭೆ ಸ್ಥಾನಕ್ಕೆ ಹಾಗೂ ಟಿಎಂಸಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ