ಬೆಂಗಳೂರು, ಆ.1: ರಾಜ್ಯದಲ್ಲಿ ಹೆಚ್ಐವಿ (HIV) ಸೋಂಕಿನ ಸ್ಥಿತಿಗತಿ ಹಾಗೂ ಇತ್ತೀಚೆಗೆ ಹರಿದಾಡುತ್ತಿದ್ದ ವಿವಿಧ ವದಂತಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಣೆ ಹಾಗೂ ಸ್ಪಷ್ಟನೆ ನೀಡಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕು ಹರಡಿದೆ ಹಾಗೂ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅವರು ಸ್ಪಷ್ಟಪಡಿಸಿದೆ.
ರಾಜ್ಯದ ಕಾಲೇಜು ವಿದ್ಯಾರ್ಥಿಗಳಲ್ಲಿ 7,000 ಜನರಿಗೆ ಹೆಚ್ಐವಿ ಸೋಂಕು ತಗಲಿದೆ ಎಂದು ಹರಡುತ್ತಿರುವ ಸುದ್ದಿ ಸುಳ್ಳು. ಶಾಲಾ-ಕಾಲೇಜುಗಳಲ್ಲಿ ಹೆಚ್ಐವಿ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂಬ ನಿಯಮವಿಲ್ಲ. ಶಾಲಾ-ಕಾಲೇಜುಗಳಲ್ಲಿ ಕೇವಲ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿಗೆ ಹೆಚ್ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ.
ಪ್ರಸ್ತುತ ಮುಖ್ಯವಾಗಿ ಎರಡು ಸಂದರ್ಭಗಳಲ್ಲಿ ಮಾತ್ರ ಹೆಚ್ಐವಿ ಪರೀಕ್ಷೆ ನಡೆಸಲಾಗುತ್ತಿದೆ. ಒಂದು ಗರ್ಭಿಣಿಯರ ಹೆರಿಗೆ ಸಮಯದಲ್ಲಿ, ಇನ್ನೊಂದು ರಕ್ತದಾನ ಮಾಡುವ ಸಮಯದಲ್ಲಿ ಎಂದು ಹೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಟ್ಟು 5,53,453 ಜನರನ್ನು ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ 3,091 ಸೋಂಕಿತರು ಪತ್ತೆಯಾಗಿದ್ದಾರೆ.
ಈ ಪೈಕಿ 2,81,742 ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 111 ಗರ್ಭಿಣಿಯರಲ್ಲಿ ಹೆಚ್ಐವಿ ಪಾಸಿಟಿವ್ ಕಂಡುಬಂದಿದೆ. ರಾಜ್ಯದಲ್ಲಿ 2004 ರಿಂದ ಇಲ್ಲಿಯವರೆಗೆ 39,028 ಸೋಂಕಿತರು ನೋಂದಾಯಿತರಾಗಿದ್ದಾರೆ. 18 ರಿಂದ 35 ವರ್ಷದೊಳಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಹೆರಿಗೆಯಾದ ನಂತರ ಹಾಲುಣಿಸುವ ತಾಯಿ ಪೊರಕೆ ಏಕೆ ಮುಟ್ಟಬಾರದು? ಇಲ್ಲಿದೆ ಸಂಪ್ರದಾಯದ ಹಿಂದಿನ ರಹಸ್ಯ!
ಸುಮಾರು 56,000 ಸೋಂಕಿತರು ಸದ್ಯ ತಪಾಸಣೆ ಮತ್ತು ನಿರಂತರ ಚಿಕಿತ್ಸಾ ವ್ಯಾಪ್ತಿಯಿಂದ ಹೊರಗುಳಿದಿರುವುದು ಕಂಡುಬಂದಿದ್ದು, ಅವರನ್ನು ಪತ್ತೆಹಚ್ಚಿ ಚಿಕಿತ್ಸೆಗೆ ತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯದಲ್ಲಿ ಹೆಚ್ಐವಿ ಸೋಂಕಿತರ ಪ್ರಮಾಣ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
