ಮಂಡ್ಯ, ಆಗಸ್ಟ್ 3: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆ ಸುರಿಯುತ್ತಿದ್ದು, ಜಲಾಶಯದಲ್ಲಿ ಸುಮಾರು 8 ಅಡಿಯಷ್ಟು ನೀರು ಏರಿಕೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಕೇವಲ 17 ಟಿಎಂಸಿ ಇದ್ದ ನೀರಿನ ಸಂಗ್ರಹ ಈಗ 23 ಟಿಎಂಸಿ ತಲುಪಿದೆ. ಪ್ರಸ್ತುತ ಕೆಆರ್ಎಸ್ ಜಲಾಶಯಕ್ಕೆ 32,048 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 1,821 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದು ಮಂಡ್ಯ ಭಾಗದ ರೈತರಿಗೆ ಆಶಾಭಾವನೆ ಮೂಡಿಸಿದೆ. ಹಿಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದ್ದ ಸಂದರ್ಭದಲ್ಲಿ, ಈಗ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂಬ ಖುಷಿಯಲ್ಲಿದ್ದಾರೆ.
ಆದರೆ, ಈ ಖುಷಿಯ ನಡುವೆಯೂ ಮಂಡ್ಯ ಜಿಲ್ಲೆಯಲ್ಲಿ ಮಳೆಯ ಕೊರತೆ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಮಳೆ ಆಶ್ರಿತ ಬೆಳೆಗಳಿಗೆ ನೀರು ಸಿಗದೆ ಇರುವ ಭೀತಿ ರೈತರಲ್ಲಿ ಇನ್ನೂ ಇದೆ. ಜಲಾಶಯ ಸಂಪೂರ್ಣ ಭರ್ತಿಯಾಗಲು ಇನ್ನೂ 10-15 ದಿನ ಉತ್ತಮ ಮಳೆಯ ಅಗತ್ಯವಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
