ನವದೆಹಲಿ, (ಆಗಸ್ಟ್ 10): ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಂತೆ ತಕ್ಷಣವೇ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು(Tamil Nadu) ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ (ಆ.13) ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿದೆ. ತಮಿಳುನಾಡು ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುನ್ನೆಲೆಗೆ ತಂದು ತುರ್ತು ವಿಚಾರಣೆಗೆ ಮನವಿ ಮಾಡಿದರು. ಈ ಮನವಿಯನ್ನು ಆಲಿಸಿದ ನ್ಯಾಯಪೀಠವು ಗುರುವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.
ಜುಲೈ 30 ರಂದು ನಡೆದ ಸಭೆಯಲ್ಲಿ ದಿನಕ್ಕೆ 3,500 ಕ್ಯೂಸೆಕ್ನಂತೆ 15 ದಿನಗಳ ಕಾಲ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿತ್ತು. ಆದ್ರೆ, ಇದಕ್ಕೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಮಳೆ ಇಲ್ಲದ ಕಾರಣ ಕಾವೇರಿ ಜಲಾಶಯದಲ್ಲಿ ನೀರಿಲ್ಲ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಆಗಸ್ಟ್ 3 ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
