ನವದೆಹಲಿ, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಸೋರಿಕೆ ತಡೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಸೂದೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ನೀಡಿರುವ ಹೇಳಿಕೆಗೆ ಕಾಕ್ರೋಚ್ ಜನತಾ ಪಾರ್ಟಿ (CJP) ತೀವ್ರ ತಿರುಗೇಟು ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನೀವು ತೆಗೆದುಕೊಳ್ಳಬಹುದಾದ ಅತ್ಯಂತ ಕಠಿಣ ಹಾಗೂ ಪ್ರಮುಖ ಕ್ರಮ ಎಂದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ತಕ್ಷಣವೇ ತೆಗೆದುಹಾಕುವುದು ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಸವಾಲೆಸೆದಿದ್ದಾರೆ.
ಇನ್ನೊಂದೆಡೆ, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಪ್ರಧಾನಿಯವರ ಘೋಷಣೆಯನ್ನು ವ್ಯಂಗ್ಯವಾಡಿದ್ದು, ಕಾಂಪೌಂಡ್ ಇಲ್ಲದೆ ದ್ವಾರಕ್ಕೆ ಬಾಗಿಲು ಹಾಕಿ ಬೀಗ ಜಡಿಯುತ್ತಿರುವ” ಚಿತ್ರವನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಳ್ಳುವ ಮೂಲಕ ಪ್ರಸ್ತಾವಿತ ಮಸೂದೆಯನ್ನು ಟೀಕಿಸಿದ್ದಾರೆ.
26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್
ಮತ್ತೊಂದೆಡೆ, ರಾಷ್ಟ್ರ ರಾಜಧಾನಿಯಲ್ಲಿ ಕಳೆದ 26 ದಿನಗಳಿಂದ ನಡೆಯುತ್ತಿದ್ದ ಬಿಗುವಿನ ವಾತಾವರಣ ಶಮನಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬೆನ್ನಲ್ಲೇ, ಖ್ಯಾತ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್ ಅವರು ಗುರುವಾರ ಮಧ್ಯರಾತ್ರಿ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಮತ್ತಷ್ಟು ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ
ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಹಾಗೂ ಲೇಹ್-ಲಡಾಖ್ ಅಪೆಕ್ಸ್ ಬಾಡಿಯ ಹಿರಿಯ ನಾಯಕರು ಭೇಟಿ ಮಾಡಿ ಸರ್ಕಾರದ ಭರವಸೆಯ ಪತ್ರವನ್ನು ಹಸ್ತಾಂತರಿಸಿದರು.
ಪ್ರತಿಭಟನಾಕಾರರಿಗೆ ಸರ್ಕಾರ ನೀಡಿದ ಪ್ರಮುಖ ಭರವಸೆಗಳು
ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಜುಲೈ 20 ರಂದು ನಡೆದ ‘ಸಂಸತ್ ಚಲೋ’ ಮೆರವಣಿಗೆಯ ವೇಳೆ ಪೊಲೀಸರು ದಾಖಲಿಸಿದ್ದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಸಕಾರಾತ್ಮಕವಾಗಿದೆ ಎಂದು ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪರೀಕ್ಷಾ ಸುಧಾರಣೆಗಳು ಹಾಗೂ ಪೇಪರ್ ಸೋರಿಕೆ ಕುರಿತು ಸಮಗ್ರ ಚರ್ಚೆಗೆ ಅವಕಾಶ ನೀಡಲಾಗುವುದು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಆಘಾತದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಆರ್ಥಿಕ ಪರಿಹಾರ ನೀಡುವುದನ್ನು ಸರ್ಕಾರ ಪರಿಗಣಿಸಲಿದೆ.
ವಾಂಗ್ಚುಕ್ ಆರೋಗ್ಯಕ್ಕೆ ಪ್ರಧಾನಿ ಮೋದಿ ಹಾರೈಕೆ
ಸೋನಮ್ ಅವರು ಉಪವಾಸ ಹಿಂಪಡೆದ ತಕ್ಷಣವೇ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ವೈದ್ಯರ ಸಲಹೆಯಂತೆ ಸೋನಮ್ ಜಿ ಅವರು ತಮ್ಮ ದೈನಂದಿನ ಆಹಾರ ಕ್ರಮವನ್ನು ಅನುಸರಿಸಿ, ಶೀಘ್ರವೇ ತಮ್ಮ ದೇಹದ ತೂಕ ಮತ್ತು ಆರೋಗ್ಯವನ್ನು ಮರಳಿ ಪಡೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದ್ದಾರೆ.
ತಮ್ಮ ಹೋರಾಟಕ್ಕೆ ದೇಶಾದ್ಯಂತ 65 ಕ್ಕೂ ಹೆಚ್ಚು ಸಂಸದರು ಹಾಗೂ ಸಾರ್ವಜನಿಕರು ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿರುವ ಸೋನಮ್ , “ಯಾರೂ ಕೂಡ ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶ ನೀಡಬಾರದು” ಎಂದು ವಿದ್ಯಾರ್ಥಿ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ