ಗದ್ದಿಗೆಬೆಟ್ಟ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣImage Credit source: The New Indian Express
ಮಡಿಕೇರಿ, ಜುಲೈ 28: ಕೊಡಗು (Kodagu) ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮದಲ್ಲಿರುವ ಗದ್ದಿಗೆಬೆಟ್ಟ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾಧಿ ಮಾದರಿಯ ರಚನೆ (‘ಸಮಾಧಿ ಪೂಜೆ’ ಮಾಡಿದ ಕುರುಹು) ಪತ್ತೆಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ನೂರಾರು ಗ್ರಾಮಸ್ಥರು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳೊಂದಿಗೆ ಸೇರಿ ದೇವಾಲಯದ ಎದುರು ಪ್ರತಿಭಟನೆ ನಡೆಸಿ, ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ದೇವಾಲಯದ ಆವರಣದಲ್ಲಿ ‘ಸಮಾಧಿ ಪೂಜೆ’!
ದೇವಾಲಯದ ಆಡಳಿತ ಮಂಡಳಿಯ ಮಾಹಿತಿ ಪ್ರಕಾರ, ಭಾನುವಾರ ಬೆಳಗ್ಗೆ ಸಿಬ್ಬಂದಿ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಹೂಗಳಿಂದ ಅಲಂಕರಿಸಲಾದ ಸಮಾಧಿ ಮಾದರಿಯ ರಚನೆ ದೇವಾಲಯದ ಆವರಣದಲ್ಲಿ ಕಂಡುಬಂದಿದೆ. ಇದರಿಂದ ಮುಸ್ಲಿಂ ಸಂಪ್ರದಾಯದ ‘ಸಮಾಧಿ ಪೂಜೆ’ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಲಾಗಿದೆ.
ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ಹಾಗೂ ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಕೆಲ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ತಿಳಿಸಿದ್ದು, ಅದರ ದೃಶ್ಯಾವಳಿಗಳನ್ನು ಪೊಲೀಸರಿಗೆ ಸಲ್ಲಿಸಲಾಗಿದೆ.
ಭಾರಿ ಪ್ರತಿಭಟನೆ, ರಸ್ತೆ ತಡೆ
ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಬಿಜೆಪಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಬೆಂಬಲದೊಂದಿಗೆ ಸೋಮವಾರ ದೇವಾಲಯದ ಎದುರು ಭಾರಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಆರೋಪಿಗಳನ್ನು ಇನ್ನೂ ಬಂಧಿಸದಿರುವುದಕ್ಕೆ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಘಟನೆ ನಡೆದ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೆ ಸೇರಿರುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಾಕಾರರು ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.
ಸಮಾಧಿ ಮಾದರಿಯ ರಚನೆ ತೆರವುಗೊಳಿಸಿದ ಪ್ರತಿಭಟನಾಕಾರರು
ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಸಮಾಧಿ ಮಾದರಿಯ ರಚನೆಯನ್ನು ಪ್ರತಿಭಟನಾಕಾರರು ತೆರವುಗೊಳಿಸಿದರು. ಅದರೊಳಗೆ ಯಾವುದೇ ವಸ್ತು ಇರಲಿಲ್ಲ ಎಂದು ಅವರು ಹೇಳಿದ್ದು, ಹೂವುಗಳನ್ನು ತೆರವುಗೊಳಿಸಿದರು. ಇದೇ ವೇಳೆ, ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಲಾಗಿದೆ ಎಂಬ ಆರೋಪವನ್ನೂ ಪ್ರತಿಭಟನಾಕಾರರು ಮಾಡಿದ್ದು, ಈ ಎಲ್ಲ ಬೆಳವಣಿಗೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪೊಲೀಸರಿಂದ ಕಠಿಣ ಕ್ರಮದ ಭರವಸೆ
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಅರಣ್ಯ ಇಲಾಖೆಯ ಆರ್ಎಫ್ಒ ನವೀನ್ ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚುವ ಭರವಸೆ ನೀಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ರಾಬಿನ್ ದೇವಯ್ಯ, ರವಿ ಕುಶಾಲಪ್ಪ ಸೇರಿದಂತೆ ಆರ್ಎಸ್ಎಸ್ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 11:36 am, Tue, 28 July 26
