
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಟ್ರೋಫಿ ಎತ್ತಿ ಹಿಡಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಇದಕ್ಕೂ ಮುನ್ನ ಭಾರತ ತಂಡವು 2007 ಮತ್ತು 2024 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ಮತ್ತೊಮ್ಮೆ ವಿಶ್ವ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಐತಿಹಾಸಿಕ ಕ್ಷಣಗಳಿಗೆ ಈ ಹಿಂದಿನ ವಿಶ್ವಕಪ್ ವಿಜೇತ ನಾಯಕರುಗಳು ಸಾಕ್ಷಿಯಾಗಿದ್ದರು. ಅಂದರೆ ಮಹೇಂದ್ರ ಸಿಂಗ್ ಧೋನಿ ಹಾಗೂ ರೋಹಿತ್ ಶರ್ಮಾ ಈ ಪಂದ್ಯದ ವೇಳೆ ಹಾಜರಿದ್ದರು. ಇತ್ತ ಟೀಮ್ ಇಂಡಿಯಾ ಮೂರನೇ ಬಾರಿ ವಿಶ್ವಕಪ್ ಗೆದ್ದ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಹಾಡಿ ಹೊಗಳಿದ್ದು ವಿಶೇಷ.
ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಐತಿಹಾಸಿಕ ಜಯ ಸಾಧಿಸಿದ ನಂತರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಾಮಾಜಿಕ ಜಾಲತಾಣದ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಪ್ರಶಂಸೆಯ ಸಾರಾಂಶ ಈ ಕೆಳಗಿನಂತಿದೆ…
“ಕೋಚ್ ಸಾಬ್, ನಿಮ್ಮ ನಗು ಅದ್ಭುತವಾಗಿ ಕಾಣುತ್ತಿದೆ. ಗಂಭೀರತೆಯೊಂದಿಗೆ ನಗು ಇರುವುದು ಒಂದು ‘ಕಿಲ್ಲರ್ ಕಾಂಬಿನೇಶನ್’. ತುಂಬಾ ಚೆನ್ನಾಗಿ ಆಡಿದ್ದೀರಿ, ಆನಂದಿಸಿ ಗೆಳೆಯರೇ” ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಸಾಮಾನ್ಯವಾಗಿ ಮೈದಾನದಲ್ಲಿ ಗಂಭೀರವಾಗಿ ಕಾಣಿಸಿಕೊಳ್ಳುವ ಗೌತಮ್ ಗಂಭೀರ್, ಭಾರತದ ಗೆಲುವಿನ ಸಂಭ್ರಮದಲ್ಲಿ ನಗುತ್ತಿರುವುದನ್ನು ಕಂಡು ಧೋನಿ ಈ ರೀತಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.
ಇದೇ ಪೋಸ್ಟ್ನಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಬೌಲಿಂಗ್ ಅನ್ನು ಕೊಂಡಾಡಿದ ಧೋನಿ, ಅವರನ್ನು “ಚಾಂಪಿಯನ್ ಬೌಲರ್” ಎಂದು ಕರೆದಿದ್ದಾರೆ. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: Sanju Samson: ನನ್ನ ಈ ಪ್ರದರ್ಶನಕ್ಕೆ ‘ಅವರೇ’ ಕಾರಣ..!
ಇನ್ನು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಪ್ರಚಂಡ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.