
ರಾಮನಗರ, ಮಾರ್ಚ್ 12: ಕೌಟಿಂಬಿಕ ಕಲಹ ಹಿನ್ನೆಲೆ ಐದು ತಿಂಗಳ ಗರ್ಭಿಣಿ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯ ರೂಮ್ನಲ್ಲಿಯೇ ನಯನಾ (19) ಮೃತಪಟ್ಟಿದ್ದಾರೆ. ಕಳೆದ 9 ತಿಂಗಳ ಹಿಂದೆ ಸುನೀಲ್ ಜೊತೆ ನಯನಾ ಅವರ ವಿವಾಹವಾಗಿತ್ತು ಎನ್ನಲಾಗಿದೆ. ಪತಿ ಸುನೀಲ್, ಅತ್ತೆ ಹಾಗೂ ಮಾವನ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಯುವಕ ನೇಣಿಗೆ ಶರಣು
ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೇತನ್ (20) ಮೃತ ವ್ಯಕ್ತಿಯಾಗಿದ್ದು, ಇವರು ಖಾಸಗಿ ಕಾಲೇಜಿನ ವ್ಯಾನ್ ಮ್ಯಾನೇಜ್ಮೆಂಟ್ ಕೆಲಸ ಮಾಡಿಕೊಂಡಿದ್ದರು. ಮನೆ ಬಿಟ್ಟು ಹೋಗುತ್ತೇನೆ ಇಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸ್ನೇಹಿತನಿಗೆ ಮೆಸೇಜ್ ಮಾಡಿ ಬಳಿಕ ಚೇತನ್ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಹಲವು ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತಾರಾಜ್ಯ ಬೈಕ್ ಕಳ್ಳರ ಬಂಧನ
ವಿಷ ಸೇವಿಸಿ ಆತ್ಮಹತ್ಯೆಗೆ ರೈತನ ಯತ್ನ
ಖಾತೆ ಮಾಡಿಕೊಡದೆ ಸತಾಯಿಸಿದ ಆರೋಪ ಹಿನ್ನೆಲೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ನಾಡಕಚೇರಿ ಎದುರೇ ವಿಷ ಸೇವಿಸಿ ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಮೀನಿನ ಖಾತೆ ಮಾಡಿಸಲು ಎರಡು ವರ್ಷಗಳಿಂದ ನಾಡಕಚೇರಿಗೆ ಅಲೆದಾಟ ನಡೆಸಿದ್ದ ಚಿಕ್ಕನಾಯಕನಹಳ್ಳಿ ಗ್ರಾಮದ ರೈತ ರಂಗೇಗೌಡ (70) ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ವಿಷಯವನ್ನು ತಹಸೀಲ್ದಾರ್ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿರಲಿಲ್ಲ. ಹೀಗಾಗಿ ಬೇಸತ್ತು ಸಾರ್ವಜನಿಕರ ಮುಂದೆಯೇ ರಂಗೇಗೌಡ ಕ್ರಿಮಿನಾಶಕ ಸೇವನೆ ಮಾಡಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅವರನ್ನು ರವಾನೆ ಮಾಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು–ಬದುಕಿನ ನಡುವೆ ರಂಗೇಗೌಡ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಾಲೂಕು ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ದಾಖಲೆ, ಖಾತೆ, ಜನನ–ಮರಣ ಪ್ರಮಾಣ ಪತ್ರಕ್ಕೂ ಅಲೆದಾಡಬೇಕಾದ ಸ್ಥಿತಿ ಇದೆ ಎಂದು ದೂರಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.