ಧಾರವಾಡ, ಆಗಸ್ಟ್ 18: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಷನ್ (AKSSA) ಸಂಘಟನೆ ಧಾರವಾಡದಲ್ಲಿ ಹೋರಾಟಕ್ಕೆ ಕರೆ ನೀಡಿದ್ದು, ನಗರದಲ್ಲಿ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಧಾರವಾಡದ ಶ್ರೀನಗರ ವೃತ್ತ ಸೇರಿದಂತೆ ಪ್ರಮುಖ ಜಂಕ್ಷನ್ಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಲ್ಲಿ 8 ರಿಂದ 10 ಸಾವಿರ ಆಕಾಂಕ್ಷಿಗಳು ಸೇರಿ ಇಡೀ ನಗರವನ್ನು ಸ್ತಬ್ಧಗೊಳಿಸಿದ್ದರು. ಸಾರ್ವಜನಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ, ನಂತರದ ಹೋರಾಟಗಳಿಗೆ ಹೈಕೋರ್ಟ್ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕೇವಲ 100 ಜನರಿಗೆ ಮಾತ್ರ ಅವಕಾಶ ನೀಡಿತ್ತು. ಆದರೂ, AKSSA ಸಂಘಟನೆಯು ಹೋರಾಟ ಮುಂದುವರಿಸಲು ನಿರ್ಧರಿಸಿದೆ.
ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ, ಸಂಘಟನೆ ಅಧ್ಯಕ್ಷ ಕಾಂತ ಕುಮಾರ್ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಆದರೆ, ಅವರ ಸುಳಿವು ಇದುವರೆಗೂ ಲಭ್ಯವಾಗಿಲ್ಲ. 2.84 ಲಕ್ಷ ಹುದ್ದೆಗಳು ಖಾಲಿ ಇದ್ದರೂ, ಕೇವಲ 5-10% ಮಾತ್ರ ಭರ್ತಿ ಮಾಡಲಾಗುತ್ತಿದೆ ಎಂದು ಸಂಘಟನೆ ಆರೋಪಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ನಗರದ ಪ್ರವೇಶ ದ್ವಾರಗಳಲ್ಲಿ ವಾಹನ ತಪಾಸಣೆ ಮತ್ತು ಮಾರ್ಗ ಬದಲಾವಣೆಗಳನ್ನು ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
