ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)Image Credit source: tv9
ಬೆಂಗಳೂರು, ಜುಲೈ 30: ಕರ್ನಾಟಕ ಕಾಂಗ್ರೆಸ್ ಸರ್ಕಾರದ, ಸಿಎಂ ಡಿಕೆ ಶಿವಕುಮಾರ್ ನೇತೃತ್ವ ಸಂಪುಟ ವಿಸ್ತರಣೆ (Karnataka Cabinet Expansion) ಮತ್ತೊಮ್ಮೆ ವಿಳಂಬವಾಗಿದೆ. ಸಚಿವಾಕಾಂಕ್ಷಿಗಳ ಕುತೂಹಲ ಮುಂದುವರಿದಿದೆ. ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದರೂ, ಸಚಿವರ ಪಟ್ಟಿ ಅಂತಿಮವಾಗುತ್ತಿಲ್ಲ. ಸಚಿವರ ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಬೇಕಿರುವ ರಾಹುಲ್ ಗಾಂಧಿ ಅವರ ಭೇಟಿಗೆ ಇನ್ನೂ ಸಮಯ ಸಿಗದಿರುವುದು ಸಂಪುಟ ವಿಸ್ತರಣೆಯ ವಿಳಂಬಕ್ಕೆ ಕಾರಣವಾಗಿದೆ.
ಸಚಿವ ಸ್ಥಾನಕ್ಕಾಗಿ 35ಕ್ಕೂ ಹೆಚ್ಚು ಮಂದಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಒಂದು ಪಟ್ಟಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಮತ್ತೊಂದು ಪಟ್ಟಿ ಹಾಗೂ ಹೈಕಮಾಂಡ್ ಸಿದ್ಧಪಡಿಸಿರುವ ಮತ್ತೊಂದು ಪಟ್ಟಿ ಇದೆ ಎನ್ನಲಾಗಿದೆ. ಈ ಮೂರು ಪಟ್ಟಿಗಳ ಪೈಕಿ ಅಂತಿಮವಾಗಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಸೋಮವಾರದಿಂದಲೇ ದೆಹಲಿಯಲ್ಲಿ ಇರುವ ಸಿಎಂ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ದೆಹಲಿಯಲ್ಲೇ ಇದ್ದಾರೆ. ಆದರೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಬೇಕಿರುವ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಈವರೆಗೂ ಸಮಯ ಸಿಕ್ಕಿಲ್ಲ.
ರಾಹುಲ್ ಗಾಂಧಿ ಸಮಯ ಸಿಗದಿರಲು ಕಾರಣವೇನು?
ರಾಹುಲ್ ಗಾಂಧಿ ನೀಟ್ ಪ್ರತಿಭಟನೆ ಹಿನ್ನೆಲೆಯಲ್ಲಿ ವ್ಯಸ್ತರಾಗಿರುವುದರಿಂದ ಸಭೆ ವಿಳಂಬವಾಗಿದೆ ಎನ್ನಲಾಗಿದೆ. ನಿನ್ನೆ ಸಚಿವರ ಪಟ್ಟಿ ಅಂತಿಮವಾಗಬಹುದು, ಇಂದೇ ಪ್ರಮಾಣವಚನ ನಡೆಯಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಮತ್ತೆ ವಿಳಂಬವಾಗಿದೆ. ಇದೀಗ ರಾಹುಲ್ ಗಾಂಧಿ ಅವರ ಸಂದೇಶಕ್ಕಾಗಿ ಡಿ.ಕೆ.ಶಿವಕುಮಾರ್ ಕಾಯುತ್ತಿದ್ದಾರೆ. ಸಮಯ ಸಿಕ್ಕರೆ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಿ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.
ನಾಳೆ ಪ್ರಮಾಣವಚನಕ್ಕೆ ಸಿದ್ಧತೆ?
ಸಚಿವರ ಪಟ್ಟಿ ಇನ್ನೂ ಅಂತಿಮವಾಗದಿದ್ದರೂ ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮುಂದುವರಿದಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಈ ಹಿಂದೆ ಎರಡು ಬಾರಿ ಪ್ರಮಾಣವಚನದ ಕುರಿತು ಲೋಕಭವನಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು. ಇದೀಗ ಮೂರನೇ ಬಾರಿಗೆ ಮಾಹಿತಿ ರವಾನಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಸಮಯ ನಿಗದಿಪಡಿಸಲಾಗಿದೆ.
ಲೋಕಭವನದಲ್ಲಿ ಶಾಮಿಯಾನ ಹಾಗೂ ಟೆಂಟ್ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿ, ಲೋಕಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದ್ದಾರೆ.
ಜಮೀರ್ ಮುಖದಲ್ಲಿ ಮಂದಹಾಸ: ಸಿಗುತ್ತಾ ಗುಡ್ನ್ಯೂಸ್?
ಹೈಕಮಾಂಡ್ನ ತುರ್ತು ಬುಲಾವ್ ಮೇರೆಗೆ ಬುಧವಾರ ದೆಹಲಿಗೆ ತೆರಳಿದ್ದ ಜಮೀರ್ ಅಹ್ಮದ್ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ತರಾತುರಿಯಲ್ಲಿ ಕಾರು ಹತ್ತಿ ತೆರಳಿದ ಜಮೀರ್ ಅವರ ಮುಖದಲ್ಲಿದ್ದ ಮಂದಹಾಸವೂ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹೈಕಮಾಂಡ್ನಿಂದ ಸಚಿವ ಸ್ಥಾನದ ಕುರಿತು ಗುಡ್ನ್ಯೂಸ್ ಸಿಕ್ಕಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.
ಸಂಪುಟ ವಿಸ್ತರಣೆ ವಿಳಂಬಕ್ಕೆ ವಿಪಕ್ಷಗಳ ಟೀಕೆ
ಇತ್ತ ಸಂಪುಟ ವಿಸ್ತರಣೆಗಾಗಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿರುವ ವಿಚಾರವನ್ನೇ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ. ರಾಜ್ಯದಲ್ಲಿ ಬರಗಾಲ ಹಾಗೂ ರೈತರ ಸಮಸ್ಯೆಗಳಿರುವಾಗ ಮುಖ್ಯಮಂತ್ರಿ ದೆಹಲಿಯಲ್ಲಿ ಸಂಪುಟ ವಿಸ್ತರಣೆಯ ಕಸರತ್ತಿನಲ್ಲಿ ತೊಡಗಿದ್ದಾರೆ ಎಂದು ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.
ಇದನ್ನೂ ಓದಿ: ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಒಟ್ಟಿನಲ್ಲಿ, ಆಗಸ್ಟ್ 8ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಕಾಂಗ್ರೆಸ್ ನಾಯಕತ್ವದ ಮೇಲೆ ಒತ್ತಡ ಹೆಚ್ಚಾಗಿದೆ. ಇಂದಾದರೂ ರಾಹುಲ್ ಗಾಂಧಿ ಅವರಿಂದ ಗ್ರೀನ್ ಸಿಗ್ನಲ್ ಸಿಗುತ್ತಾ? ಸಚಿವರ ಪಟ್ಟಿ ಅಂತಿಮವಾಗುತ್ತಾ? ನಾಳೆ ಪ್ರಮಾಣವಚನ ನಡೆಯುತ್ತಾ? ಎಂಬುದಕ್ಕೆ ಮುಂದಿನ ಬೆಳವಣಿಗೆಗಳೇ ಉತ್ತರ ನೀಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ