
‘ಡೆಡ್ಲಿ ಸೋಮ’, ‘ಮಾದೇಶ’ ರೀತಿಯ ಮಾಸ್ ಸಿನಿಮಾಗಳನ್ನು ಮಾಡಿದ ನಿರ್ದೇಶಕ ರವಿ ಶ್ರೀವತ್ಸ ಅವರು ಈ ಬಾರಿ ಇನ್ನಷ್ಟು ಗಂಭೀರವಾದ ಕತೆಯನ್ನು ಪ್ರೇಕ್ಷಕರಿಗೆ ತೋರಿಸಲು ಬರುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ‘ಗ್ಯಾಂಗ್ಸ್ ಆಫ್ ಯುಕೆ’ (Gangs Of UK) ಸಿನಿಮಾ ಮೂಡಿಬಂದಿದೆ. ಈ ಸಿನಿಮಾ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಆ ವೇಳೆ ರವಿ ಶ್ರೀವತ್ಸ (Ravi Srivatsa) ಹಾಗೂ ಚಿತ್ರತಂಡದವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.
ಏಪ್ರಿಲ್ 10ರಂದು ರಿಲೀಸ್ ಆಗಲಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಸಿನಿಮಾವನ್ನು ಚಂದನ್ ಸುರೇಶ್ ಅವರು ರಾಜ್ಯಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಸೂರಪ್ಪ ಬಾಬು, ಕೆ. ಮಂಜು ಮುಂತಾದವರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಹಾಜರಿದ್ದರು. ‘ಒಂದು ಸಣ್ಣ ಜಗಳದಿಂದ ಶುರುವಾದ ಕಥೆಯಲ್ಲಿ ರಕ್ತ ನಿರಂತರವಾಗಿ ಹರಿಯುತ್ತದೆ. ಇದಕ್ಕೂ ಭೀಮಾತೀರದ ಹಂತಕರ ಕಥೆಗೂ ಸಂಬಂಧವಿಲ್ಲ’ ಎಂದು ರವಿ ಶ್ರೀವತ್ಸ ಅವರು ಹೇಳಿದ್ದಾರೆ.
Gangs Of Uk Movie Team
‘ನಾನೊಬ್ಬನೇ ಈ ಸಿನಿಮಾ ಮಾಡಿದ್ದರೆ ಇನ್ನಷ್ಟು ಕ್ರೌರ್ಯ ಹೆಚ್ಚಾಗುತ್ತಿತ್ತು. ಬಹುಶಃ ಆಗ ಚಿತ್ರದ ಸೆನ್ಸಾರ್ ಆಗುತ್ತಿರಲಿಲ್ಲವೇನೋ. ಅದೇ ಕಾರಣಕ್ಕೆ ಗುರುಗಳಾದ ಎಂ.ಎಸ್. ರಮೇಶ್ ಅವರನ್ನು ಇಟ್ಟುಕೊಂಡು ಹೋದೆ. ಅವರು ಮತ್ತು ಇಡೀ ಚಿತ್ರತಂಡದ ಸಹಕಾರ ಮತ್ತು ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ರೂಪುಗೊಂಡಿದೆ’ ಎಂದಿದ್ದಾರೆ ನಿರ್ದೇಶಕ ರವಿ ಶ್ರೀವತ್ಸ.
‘ಗ್ಯಾಂಗ್ಸ್ ಆಫ್ ಯುಕೆ’ ಟ್ರೇಲರ್:
ಈ ಸಿನಿಮಾವನ್ನು ರವಿ ಶ್ರೀವತ್ಸ ಅವರು ‘ಡೆಡ್ಲಿ ಆರ್ಟ್ಸ್’ ಸಂಸ್ಥೆಯ ಮೂಲಕ ನಿರ್ಮಿಸಿದ್ದಾರೆ. ಸಿನಿಮಾದಲ್ಲಿ ಒರಟ ಪ್ರಶಾಂತ್, ಮುನಿ, ಪದ್ಮಾ ವಾಸಂತಿ, ಪ್ರವೀಣ್, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ಉಮೇಶ್, ವಿಕಾಸ್, ಅಮೋಘ್ ಮುಂತಾದವರು ಅಭಿನಯಿಸಿದ್ದಾರೆ. ಆರ್. ಗಿರಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಇದನ್ನೂ ಓದಿ: ಈಡೇರಲೇ ಇಲ್ಲ ಮುತ್ತಪ್ಪ ರೈ ಬಯೋಪಿಕ್ ಆಸೆ: ಆ ದಿನಗಳನ್ನು ವಿವರಿಸಿದ ರವಿ ಶ್ರೀವತ್ಸ
‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರಕ್ಕೆ ಎಂ.ಎಸ್. ರಮೇಶ್ ಅವರು ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಬಹಳಷ್ಟು ಜನರು ಚಿತ್ರದ ಟ್ರೇಲರ್ ನೋಡಿ ತುಂಬಾ ಕ್ರೌರ್ಯವಿದೆ ಎಂದರು. ಟ್ರೇಲರ್ ನೋಡಿದವರೆಲ್ಲರೂ ನನಗೆ ಮತ್ತು ರವಿಗೆ ಬೈದಿದ್ದಾರೆ. 2 ನಿಮಿಷದ ಟ್ರೇಲರ್ ನೋಡಿ, 2 ಗಂಟೆಯ ಚಿತ್ರದ ಬಗ್ಗೆ ಮಾತನಾಡುವುದು ಕಷ್ಟ. ಶಾಂತಿ ಬೇಕು ಎಂದರೆ ಕ್ರಾಂತಿ ಆಗಲೇಬೇಕು ಎನ್ನುವ ಮಾತಿದೆ. ಆ ತಿರುಳು ಈ ಕಥೆಯಲ್ಲಿದೆ’ ಎಂದು ಅವರು ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.