ಬೆಂಗಳೂರು, ಜುಲೈ 2: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಮತ್ತು ಮಾಹಿತಿ ಸಂಗ್ರಹವು 2028ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವುದು ಮತ್ತು ರಾಜಕೀಯ ತಂತ್ರ ರೂಪಿಸುವುದಕ್ಕಾಗಿ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವುದು, ಹಾಗೂ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳಿಗೆ ಫೋಟೋಗಳನ್ನು ಕಡ್ಡಾಯಗೊಳಿಸುವ ಮೂಲಕ, ಸರ್ಕಾರವು ಅಮಾಯಕ ಜನರಿಂದ ದತ್ತಾಂಶವನ್ನು ಸಂಗ್ರಹಿಸುತ್ತಿದೆ. ಈ ದತ್ತಾಂಶವನ್ನು ಮುಂಬರುವ 2028ರ ಚುನಾವಣಾ ತಂತ್ರಗಾರಿಕೆಗೆ ಬಳಸಿಕೊಳ್ಳಲು ಸಂಚು ರೂಪಿಸಿದೆ ಎಂದಿದ್ದಾರೆ.
ಅಲ್ಲದೆ, ಅರ್ಹ ಫಲಾನುಭವಿಗಳನ್ನು ಗುರುತಿಸುವ ನೆಪದಲ್ಲಿ, ಹಿಂದೆ ನೀಡಿದ ‘ಎಲ್ಲರಿಗೂ ಉಚಿತ’ ಎಂಬ ಭರವಸೆಯಿಂದ ಹಿಂದೆ ಸರಿದು, ಅನರ್ಹರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗುತ್ತಿದೆ. ಮೂರು ವರ್ಷಗಳ ಕಾಲ ಏನೂ ಮಾಡದ ಸರ್ಕಾರ ಈಗ ದಿಢೀರ್ ಪರಿಷ್ಕರಣೆಗೆ ಮುಂದಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
