
ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ. ಹೆಚ್ಪಿಸಿ ಮತ್ತು ಐಓಸಿ ಕೂಡ ಇದೇ ಹಾದಿ ಹಿಡಿದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಬಹುದು ಎಂದು ಫೆಡರೇಶನ್ ಆತಂಕ ವ್ಯಕ್ತಪಡಿಸಿದೆ. ಕೂಡಲೇ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಮನವಿ ಮಾಡಿದೆ.