ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ ಗೇಟ್ ಸಮೀಪ ಟಿಪ್ಪರ್ ಲಾರಿ ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಬೈಕ್ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಮನೋಜ್, ನರಸಿಂಹಮೂರ್ತಿ, ನಂದೀಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ. ಎಲ್ಲರೂ ಅಜ್ಜವಾರ ಗ್ರಾಮದ ನಿವಾಸಿಗಳಾಗಿದ್ದು, ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ದುರ್ಘಟನೆ ವಿಷಯವನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದರು. ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಅವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತರ ಪೈಕಿ ನರಸಿಂಹ ಅವರ ವಿವಾಹ ಕೆಲ ತಿಂಗಳ ಹಿಂದಷ್ಟೇ ನಡೆದಿತ್ತು. ಪ್ರೀತಿಸಿ ಮದುವೆಯಾಗಿದ್ದ ಯುವತಿ, ಮದುವೆಯಾದ ಆರು ತಿಂಗಳೊಳಗೇ ವಿಧಿಯಾಟಕ್ಕೆ ಗಂಡನನ್ನು ಕಳೆದುಕೊಂಡಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಇದನ್ನೂ ಓದಿ: ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು
ಚಿತ್ರದುರ್ಗದಲ್ಲಿ ನಡೆದ ಬಸ್ ದುರಂತದ ಆಘಾತ ಕಹಿ ನೆನಪು ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗ ಬಸ್ ಅಪಘಾತದಲ್ಲಿ ಈಗಾಗಲೇ 7 ಮಂದಿ ಮೃತಪಟ್ಟಿದ್ದು, ಸರಣಿ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.