ಬೆಂಗಳೂರು, ಏಪ್ರಿಲ್ 14: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಇದೀಗ ಈ ಬೆಳವಣಿಗೆಗಳಿಗೆ ಕಾರಣ ಏನೆಂಬುದನ್ನು ಸಚಿವ ಜಮೀರ್ ಅಹ್ಮದ್ ಬಹಿರಂಗಪಡಿಸಿದ್ದಾರೆ. ಜಬ್ಬಾರ್ ವಿಚಾರವಾಗಿ ಮಾತನಾಡಿದ ಜಮೀರ್ ಅಹ್ಮದ್, ಹೈಕಮಾಂಡ್ನಿಂದ ವೈಯಕ್ತಿಕ ಸಂಪರ್ಕದ ಕೊರತೆಯಿಂದ ಅವರು ಮನನೊಂದು ಮನೆಯಲ್ಲೇ ಉಳಿದಿದ್ದರು. ಅಲ್ಲದೆ, ಅನಾರೋಗ್ಯವೂ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ ಗೆಲುವು ಮುಖ್ಯ ಎಂದು ಜಬ್ಬಾರ್ಗೆ ಮನವಿ ಮಾಡಿದ್ದರೂ, ಪಕ್ಕದ ಮನೆಗೇ ಬಂದು ತಮ್ಮ ಮನೆಗೆ ಹೈಕಮಾಂಡ್ ನಾಯಕರು ಭೇಟಿ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಜಮೀರ್ ತಿಳಿಸಿದ್ದಾರೆ.
ಇನ್ನು ನಸೀರ್ ಅಹ್ಮದ್ ಅವರ ವಿಷಯದಲ್ಲಿ ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳು ಬಾಗಲಕೋಟೆ ಉಪಚುನಾವಣೆಯ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು. ನಸೀರ್ ಅಹ್ಮದ್ ಹತ್ತು ದಿನಗಳ ಕಾಲ ಬಾಗಲಕೋಟೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ದಾವಣಗೆರೆಗೆ ಬಂದು ಹೋಗಲು ಅನುಮತಿ ಕೇಳಿದಾಗ, ಅಲ್ಲಿಯೇ ಉಳಿದು ಕೆಲಸ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದ್ದರು ಎಂದು ಜಮೀರ್ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಸ್ಥಳೀಯ ಮುಸ್ಲಿಮರಲ್ಲಿ ಅಸಮಾಧಾನವಿದ್ದರೂ, ಈಗ ಪರಿಸ್ಥಿತಿ ಸುಧಾರಿಸಿದ್ದು, ಗೆಲುವು ನಿಶ್ಚಿತ ಎಂದು ಜಮೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ