ಬೆಂಗಳೂರು, (ಮೇ 05): ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ (BJP MLA BP Harish) ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ಗೆ ಕೋರ್ಟ್ ಬಂಧನದ ವಾರಂಟ್ (Arrest Warrant) ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಶಾಸಕ ಹರೀಶ್ ಗೆ ಬಂಧನ ಭೀತಿ ಎದುರಾಗಿದೆ.
- ಜಾತಿ ನಿಂದನೆ ಪ್ರಕರಣದಲ್ಲಿ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಬಂಧನ ವಾರಂಟ್.
- ವಿಚಾರಣೆಗೆ ಹಾಜರಾಗದಿದ್ದಕ್ಕೆ ಹರೀಶ್ ಬಂಧನಕ್ಕೆ ವಿಶೇಷ ಕೋರ್ಟ್ನಿಂದ ವಾರಂಟ್.
- ಮೇ 7ರಂದು ಕೋರ್ಟ್ಗೆ ಹಾಜರುಪಡಿಸುವಂತೆ ಹರಿಹರ ಠಾಣಾಧಿಕಾರಿಗೆ ಕೋರ್ಟ್ ನಿರ್ದೇಶನ.
- 2023 ವಿಧಾನ ಸಭೆಯ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.
2023ರ ವಿಧಾನಸಭಾ ಚುನಾವಣೆ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಮೇಲೆ ಹರಿಹರ ಕ್ಷೇತ್ರದ BSP ಮುಖಂಡ ಹನುನಂತಪ್ಪ ಎನ್ನುವರು ದೂರು ನೀಡಿದ್ದರು. ಈ ದೂರಿನ ಅನ್ವಯ ಹರಿಹರ ಟೌನ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಜಾತಿನಿಂದನೆ ಆರೋಪ: ಎಫ್ಐಆರ್ ದಾಖಲು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್, ವಿಚಾರಣೆಗೆ ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಜನಪ್ರತಿನಿಧಿಗಳು ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ನಾಡಿದ್ದು ಅಂದರೆ ಮೇ 07ರಂದು ಕೋರ್ಟ್ ಗೆ ಹಾಜರು ಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಕೋರ್ಟ್ ಆದೇಶ ಬರುತ್ತಿದ್ದಂತೆ ಹರಿಹರ ಪೊಲೀಸರು ಸಹ ಆ್ಯಕ್ಟಿವ್ ಆಗಿದ್ದು, ಶಾಸಕ ಬಿ.ಪಿ.ಹರೀಶ್ಗೆ ಬಂಧನ ಭೀತಿ ಶುರುವಾಗಿದೆ.
ಏನಿದು ಘಟನೆ?
2023 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಕೆಲ ಮುಖಂಡರು ಬಿ.ಪಿ. ಹರೀಶ್ಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ಈ ವೇಳೆ ಬಿಜೆಪಿ ಸರಕಾರ ಮೀಸಲು ಹೆಚ್ಚಿಸಿದ್ದರೂ ದಲಿತರು ನಮಗೆ ಮತ ಹಾಕಿಲ್ಲ. ‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಬಿ. ಹನುಮಂತಪ್ಪ ಮತ್ತಿತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
