ತುಮಕೂರು, ಆಗಸ್ಟ್ 16: ಕಾಂಗ್ರೆಸ್ ಹಿರಿಯ ಶಾಸಕ ಕೆ. ಷಡಕ್ಷರಿ ಅವರು ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸಲು ಪ್ರಬಲ ಕೂಗು ಎತ್ತಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. “ಸಚಿವ ಸ್ಥಾನ ನೀಡಿ, ಇಲ್ಲವಾದರೆ ಪ್ರತ್ಯೇಕ ಜಿಲ್ಲೆ ಮಾಡಿ” ಎಂದು ಈ ಹಿಂದೆ ಆಗ್ರಹಿಸಿದ್ದ ಕೆ. ಷಡಕ್ಷರಿ ಅವರಿಗೆ ಸಚಿವ ಸ್ಥಾನ ದೊರೆಯದ ಕಾರಣ, ಈಗ ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲೇಬೇಕು ಎಂದು ತೀರ್ಮಾನಿಸಿದ್ದಾರೆ.
ತಿಪಟೂರು ಕ್ಷೇತ್ರದ ಶಾಸಕರಾಗಿರುವ ಕೆ. ಷಡಕ್ಷರಿ ಅವರು, ಪ್ರತ್ಯೇಕ ಜಿಲ್ಲೆಯ ಹೋರಾಟಕ್ಕಾಗಿ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಪಟ್ಟವರ ಮನವೊಲಿಸಿ ತಿಪಟೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಿಸುವ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ, “ಕಲ್ಪತರು ನಾಡು” ಎಂದೇ ಪ್ರಸಿದ್ಧವಾಗಿರುವ ತಿಪಟೂರು ಪ್ರದೇಶಕ್ಕೆ ಅಗತ್ಯವಿರುವ ಎಲ್ಲಾ ಅಭಿವೃದ್ಧಿ ಯೋಜನೆಗಳನ್ನು ತಂದು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಘೋಷಣೆಯು ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
