ತುಮಕೂರು, ಆ.18 : ಗ್ರಾಮೀಣ ಭಾಗಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ತುಮಕೂರು ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಸ್ಗಳಿಗೆ ಅಡ್ಡಲಾಗಿ ಮಲಗಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ಗಳು ಸಿಗದೆ ಪರದಾಡುತ್ತಿರುವ ವಿದ್ಯಾರ್ಥಿಗಳು, ಸರ್ಕಾರ ಹಾಗೂ ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಿಲ್ದಾಣದ ಒಳಗೆ ಕೆಎಸ್ಆರ್ಟಿಸಿ ಬಸ್ಗಳು ಚಲಿಸದಂತೆ ಬಸ್ಗಳ ಮುಂದೆ ಅಡ್ಡಮಲಗಿದ ವಿದ್ಯಾರ್ಥಿಗಳು, ಬಸ್ಗಳನ್ನು ತಡೆದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಸ್ ತಡೆದು ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದನ್ನು ತಡೆಯಲು ಬಂದ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ತೀವ್ರ ತಳ್ಳಾಟ-ಪಟಾಟ ಹಾಗೂ ವಾಗ್ವಾದ ನಡೆಯಿತು. ಕೊರಟಗೆರೆ, ಪಾವಗಡ, ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ಭಾಗಗಳಿಂದ ನಗರದ ಕಾಲೇಜುಗಳಿಗೆ ಸಾವಿರಾರು ವಿದ್ಯಾರ್ಥಿಗಳು ನಿತ್ಯ ಸಂಚರಿಸುತ್ತಿದ್ದು, ಈ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. “ಸರ್ಕಾರ ನಮಗೆ ಉಚಿತ ಬಸ್ ಪಾಸ್ ನೀಡಿದೆ. ಆದರೆ ಸಮಯಕ್ಕೆ ಸರಿಯಾಗಿ ಬಸ್ಗಳೇ ಬರದಿರುವುದರಿಂದ ನಾವು ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತಲುಪಲಾಗುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
