ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್ನ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಲಾಗಿತ್ತು. ಈ ಬಗ್ಗೆ ಸಾಕ್ಷಿದಾರ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಸಾಕ್ಷಿಗೆ ಬಿಗಿ ರಕ್ಷಣೆ ನೀಡಿ, ಬೆದರಿಕೆ ಹಾಕಿದ ಆರೋಪಿಗಳಿಗಾಗಿ ಜಾಲ ಬೀಸಿದ್ದರು. ಸದ್ಯ ಕಾರ್ಯಾಚರಣೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ವೇಣು, ಸುಹಾಸ್ ಮತ್ತು ಪುನೀತ್ ಎಂಬ ಮೂವರನ್ನು ಅರೆಸ್ಟ್ ಮಾಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತ ಆರೋಪಿಗಳ ಹಿನ್ನೆಲೆಯನ್ನು ಕೆದಕಿದಾಗ ಆಘಾತಕಾರಿ ಸತ್ಯಗಳು ಹೊರಬಂದಿವೆ. ಬಂಧಿತರಲ್ಲಿ ಪುನೀತ್ ಎಂಬಾತ ಸೋಶಿಯಲ್ ಮೀಡಿಯಾದಲ್ಲಿ ‘ಡಿ ಕಂಪನಿ’ ಫ್ಯಾನ್ ಪೇಜ್ ಅನ್ನು ಸಕ್ರಿಯವಾಗಿ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರಾಗಿದ್ದಾರೆ.
ಸಾಕ್ಷಿದಾರ ಸಂದೀಪ್ ಅವರ ಜೊತೆ ಮಾತುಕತೆ ನಡೆಸುವ ನೆಪದಲ್ಲಿ ಯಾವುದೋ ಒಂದು ಜಾಗಕ್ಕೆ ಕರೆಸಿಕೊಂಡಿದ್ದ ಈ ಗ್ಯಾಂಗ್, ಆತನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡಿಸಿದೆ. ಈ ವೇಳೆ ಕೋರ್ಟ್ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ತೀವ್ರ ಒತ್ತಡ ಹೇರಿದ್ದಾರೆ. ಇದಕ್ಕೆ ಸಾಕ್ಷಿದಾರ ಒಪ್ಪದಿದ್ದಾಗ ಆರೋಪಿ ಸುಹಾಸ್ ಜೈಲಿನಲ್ಲಿರುವ ದರ್ಶನ್ ಹೆಸರೇಳಿ ಪ್ರಾಣ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್: 17ನೇ ಸಾಕ್ಷಿಗೆ ಬೆದರಿಕೆ ಕರೆ; ಭದ್ರತೆ ನೀಡಲು ಕೋರ್ಟ್ ಆದೇಶ
ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಮತ್ತು ಆತನ ಗೆಳತಿ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿದ್ದಾರೆ. ಪವಿತ್ರಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್ಆರ್ ನಗರದ ಶೆಡ್ಗೆ ಕರೆತಂದು ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ಇದೆ. ಈ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ಈಗಾಗಲೇ ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಸದ್ಯ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.