ದಾಳಿ ಕೊನೆಗೊಳ್ಳಬೇಕು; 3 ಭಾರತೀಯರು ಸಾವನ್ನಪ್ಪಿದ ಒಮಾನ್ ಹಡಗಿನ ಮೇಲಿನ ಅಮೆರಿಕದ ದಾಳಿಗೆ ಭಾರತ ಖಂಡನೆ – Kannada News

ನವದೆಹಲಿ, ಜೂನ್ 11: ಒಮಾನ್ ಕರಾವಳಿಯ ಬಳಿ ವಾಣಿಜ್ಯ ಹಡಗೊಂದರ ಮೇಲೆ ನಡೆದ ಭೀಕರ ದಾಳಿಯಲ್ಲಿ ಮೂವರು ಭಾರತೀಯ ನಾಗರಿಕರು ಸಾವನ್ನಪ್ಪಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಈ ದಾಳಿಯನ್ನು “ಅತ್ಯಂತ ಆತಂಕಕಾರಿ” ಎಂದು ಹೇಳಿರುವ ಭಾರತ, ಇಂತಹ ದಾಳಿಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಆಗ್ರಹಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಕಡಲ ಸಂಘರ್ಷಗಳ ನಡುವೆ, ಒಮಾನ್ ದೇಶದ ಕರಾವಳಿ ತೀರದ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ನೌಕೆಯೊಂದರ ಮೇಲೆ ಇತ್ತೀಚೆಗೆ ಭೀಕರ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಹಡಗಿನಲ್ಲಿದ್ದ ಸಿಬ್ಬಂದಿಗಳ ಪೈಕಿ ಮೂವರು ಭಾರತೀಯರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು (MEA) ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅಧಿಕೃತ ಪ್ರಕಟಣೆ ಹೊರಡಿಸಿದೆ. ಅಂತಾರಾಷ್ಟ್ರೀಯ ಜಲಮಾರ್ಗದಲ್ಲಿ ವಾಣಿಜ್ಯ ಮತ್ತು ಸರಕು ಸಾಗಣೆ ಹಡಗುಗಳ ಮೇಲೆ ನಡೆಯುತ್ತಿರುವ ಇಂತಹ ಸರಣಿ ದಾಳಿಗಳು ತೀವ್ರ ಕಳವಳಕಾರಿ ಎಂದು ಭಾರತ ಹೇಳಿದೆ. ಜಾಗತಿಕ ಸಾಗರ ಸುರಕ್ಷತೆ ಮತ್ತು ಮುಕ್ತ ಸಮುದ್ರಯಾನದ ಹಿತದೃಷ್ಟಿಯಿಂದ ವಾಣಿಜ್ಯ ನೌಕೆಗಳ ಮೇಲಿನ ದಾಳಿಗಳು ತಕ್ಷಣವೇ ನಿಲ್ಲಬೇಕು ಎಂದು ಭಾರತ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ.

ಇದನ್ನೂ ಓದಿ: ಒಮಾನ್​ನ ಶಿನಾಸ್ ಬಂದರು ಬಳಿ 20 ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಅಮೆರಿಕದ ಮತ್ತೊಂದು ದಾಳಿ

ಒಮಾನ್ ಕರಾವಳಿಯ ಬಳಿ ಹಡಗಿನ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ. ಇದರಲ್ಲಿ ದುರದೃಷ್ಟವಶಾತ್ ನಾವು ಮೂವರು ಭಾರತೀಯ ನಾಗರಿಕರನ್ನು ಕಳೆದುಕೊಂಡಿದ್ದೇವೆ. ಈ ಬಗ್ಗೆ ತೀವ್ರ ಪ್ರತಿಭಟನೆ ದಾಖಲಿಸಲು ನಾವು ಅಮೆರಿಕದ ಪ್ರಭಾರ ರಾಯಭಾರಿಯನ್ನು ಕರೆಸಿ ಆಕ್ಷೇಪ ವ್ಯಕ್ತಪಡಿಸಿದ್ದೇವೆ. ಈ ವಲಯದಲ್ಲಿ ಹಡಗುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳು ತೀವ್ರ ಕಳವಳಕಾರಿಯಾಗಿದ್ದು, ಇದು ಪ್ರಾದೇಶಿಕ ಸಂಘರ್ಷದ ನೇರ ಪರಿಣಾಮವಾಗಿದೆ. ಈ ದಾಳಿಗಳು ತಕ್ಷಣವೇ ನಿಲ್ಲಬೇಕು ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದರು.

ಹಾರ್ಮುಜ್ ಜಲಸಂಧಿಯ ಬಳಿ ಪಲಾವ್ ದೇಶದ ಧ್ವಜ ಹೊಂದಿದ್ದ ‘ಎಂಟಿ ಸೆಟ್ಟೆಬೆಲ್ಲೊ’ ಹಡಗಿನ ಮೇಲೆ ದಾಳಿ ನಡೆದ ಬಳಿಕ ಭಾರತವು ಈ ವಿಷಯವನ್ನು ನೇರವಾಗಿ ವಾಷಿಂಗ್ಟನ್ ಆಡಳಿತದೊಂದಿಗೆ ಪ್ರಸ್ತಾಪಿಸಿದೆ ಎಂದು ಹೇಳಿದರು. ಪಲಾವ್ ಧ್ವಜದ ‘ಎಂಟಿ ಸೆಟ್ಟೆಬೆಲ್ಲೊ’ ಹಡಗಿನ ಮೇಲೆ ಈ ನಿರ್ದಿಷ್ಟ ದಾಳಿ ನಡೆದ ಹಿನ್ನೆಲೆಯಲ್ಲಿ ನಾವು ಅಮೆರಿಕದ ಕಡೆಗೆ ತೀವ್ರ ಪ್ರತಿಭಟನೆಯನ್ನು ದಾಖಲಿಸಿದ್ದೇವೆ. ನಾವು ಅಮೆರಿಕದ ಸಿಡಿಎ ಅವರನ್ನು ಕರೆಸಿ, ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ನಮ್ಮ ಆಳವಾದ ಕಳವಳವನ್ನು ತಿಳಿಸಿದ್ದೇವೆ ಎಂದು ಜೈಸ್ವಾಲ್ ಹೇಳಿದರು.

ಇದನ್ನೂ ಓದಿ: ಒಮಾನ್ ಕರಾವಳಿಯಲ್ಲಿ ಭಾರತೀಯರಿದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ, ನಾಪತ್ತೆಯಾಗಿದ್ದ ಮೂವರ ಸಾವು ದೃಢ

ಒಮಾನ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿನ ಸ್ಥಳೀಯ ಆಡಳಿತ ಮತ್ತು ಹಡಗು ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಮೃತಪಟ್ಟ ಮೂವರು ಭಾರತೀಯರ ಪಾರ್ಥಿವ ಶರೀರಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಮತ್ತು ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಕಾನೂನು ಹಾಗೂ ಆರ್ಥಿಕ ನೆರವನ್ನು ಒದಗಿಸಲು ರಾಯಭಾರ ಕಚೇರಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.

ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮಿತ್ರಕೂಟದ ನಡುವಿನ ಸಂಘರ್ಷದ ಬೆನ್ನಲ್ಲೇ ಈ ದಾಳಿ ನಡೆದಿರುವುದು ಜಾಗತಿಕವಾಗಿ ಭಾರಿ ಆತಂಕ ಮೂಡಿಸಿದೆ. ಹಾರ್ಮುಜ್ ಜಲಸಂಧಿ ಮೇಲಿನ ದಾಳಿಯು ಭಾರತ ಸೇರಿದಂತೆ ಹಲವು ದೇಶಗಳ ಆರ್ಥಿಕತೆ ಮತ್ತು ನಾವಿಕರ ಸುರಕ್ಷತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಭಾರತೀಯ ನೌಕಾಪಡೆಯು ಈಗಾಗಲೇ ಈ ವಲಯದಲ್ಲಿ ತನ್ನ ಯುದ್ಧನೌಕೆಗಳ ಗಸ್ತನ್ನು ಹೆಚ್ಚಿಸಿದ್ದು, ಭಾರತೀಯ ಹಡಗುಗಳ ರಕ್ಷಣೆಗೆ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *