ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು? – Kannada News | Siddaramaiah Demands Safe Return of Indians from Middle East; Letter to PM Modi

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರImage Credit source: Google

ಬೆಂಗಳೂರು, ಮಾರ್ಚ್​​ 02: ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡು ಪುಟಗಳ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಅವರ ರಕ್ಷಣೆಗೆ ಕೂಡಲೇ ಮುಂದಾಗಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಪ್ರಧಾನಿಗೆ ಸಿಎಂ ಬರೆದ ಪತ್ರದಲ್ಲೇನಿದೆ?

ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವೇಗವಾಗಿ ಹೆಚ್ಚುತ್ತಿರುವ ಭೌಗೋಳಿಕ-ರಾಜಕೀಯ ಉದ್ವಿಗ್ನತೆ ಹಾಗೂ ಅದರ ಪರಿಣಾಮವಾಗಿ ಆ ಪ್ರದೇಶಗಳಲ್ಲಿ ವಾಸಿಸುವ, ಉದ್ಯೋಗದಲ್ಲಿರುವ, ವಿದ್ಯಾಭ್ಯಾಸ ಮಾಡುತ್ತಿರುವ ಹಾಗೂ ಪ್ರಯಾಣಕ್ಕೆಂದು ತೆರಳಿರುವ ಕನ್ನಡಿಗರು ಸೇರಿದಂತೆ ಭಾರತೀಯ ಪ್ರಜೆಗಳ ಮೇಲೆ ಉಂಟಾಗುತ್ತಿರುವ ಪರಿಣಾಮ ಕುರಿತು ನಾನು ಗಂಭೀರ ಆತಂಕ ವ್ಯಕ್ತಪಡಿಸುತ್ತೇನೆ.

ಇದನ್ನೂ ಓದಿ: ಮಧ್ಯ ಪ್ರಾಚ್ಯದಲ್ಲಿ ಯುದ್ಧ; ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

ನಾಗರಿಕ ವಿಮಾನಯಾನ ಸಚಿವಾಲಯದಿಂದ ಇತ್ತೀಚೆಗೆ ಹೊರಡಿಸಲಾದ ಸೂಚನೆಗಳ ಪ್ರಕಾರ, ಪಶ್ಚಿಮ ಏಷ್ಯಾದ ಅನೇಕ ದೇಶಗಳು ತಮ್ಮ ವಾಯುಪ್ರದೇಶದಲ್ಲಿ ನಿರ್ಬಂಧಗಳು ಮತ್ತು NOTAM ಪ್ರಕಟಿಸಿರುವುದರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಯುಎಇ (ದುಬೈ) ಸೇರಿದಂತೆ ಅನೇಕ ಕಡೆ ಕನ್ನಡಿಗರು ಸೇರಿದಂತೆ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಪ್ರಸ್ತುತದ ಘಟನೆಗಳಿಂದಾಗಿ ಅನಿಶ್ಚಿತತೆ ಮತ್ತು ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತುರ್ತು ಸಮನ್ವಯ ಸಾಧಿಸಿ ಕನ್ನಡಿಗರು ಸೇರಿದಂತೆ ಭಾರತೀಯರ ಸುರಕ್ಷತೆ ಹಾಗೂ ಅಗತ್ಯವಿದ್ದರೆ ಸ್ವದೇಶಕ್ಕೆ ಮರಳಿಸುವ ಕ್ರಮಗಳ ಕುರಿತು ಮನವಿ ಮಾಡಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಹಾಯಕ್ಕೆ ವಿನಂತಿಸಲಾಗಿದೆ.

ಪರಿಸ್ಥಿತಿಯ ಗಂಭೀರತೆ ಮತ್ತು ಅಸ್ಥಿರತೆಯನ್ನು ಮನಗಂಡು, ಕನ್ನಡಿಗರು ಸೇರಿದಂತೆ ಭಾರತೀಯ ಪ್ರಜೆಗಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಪ್ರಭಾವಿತ ಪ್ರದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿ ಮತ್ತು ವಾಣಿಜ್ಯ ದೂತಾವಾಸಗಳ ಮೂಲಕ ನಿರಂತರ ಮೇಲ್ವಿಚಾರಣೆ, ರಕ್ಷಣಾ ಕ್ರಮಗಳು ಮತ್ತು ಮಾರ್ಗದರ್ಶನ ಒದಗಿಸಬೇಕು. ಅಗತ್ಯವಿದ್ದಲ್ಲಿ ಆದ್ಯತೆ ಆಧಾರದ ಮೇಲೆ ವಿಶೇಷ ವಿಮಾನಗಳ ಮೂಲಕ ಸುರಕ್ಷಿತ ಹಾಗೂ ಸಮಯೋಚಿತವಾಗಿ ನಾಗರಿಕರನ್ನು ವಾಪಸು ಕರೆತರಲು ಸಿದ್ಧತೆ ಮಾಡಿಕೊಳ್ಳಬೇಕು.ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ರಾಜ್ಯ ಸರ್ಕಾರಗಳು ಮತ್ತು ವಿಮಾನಯಾನ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಲು ಅಂತರ್-ಸಚಿವಾಲಯ ಕಾರ್ಯಪಡೆ ರಚನೆ ಆಗಬೇಕು. ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರ ನೋಂದಣಿ, ಟ್ರ್ಯಾಕಿಂಗ್ ಹಾಗೂ ಕುಟುಂಬಗಳಿಗೆ ತಕ್ಷಣದ ಮಾಹಿತಿ ನೀಡಲು ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸುವುದು ಸೇರಿದಂತೆ ವಿಮಾನಯಾನ ಸಂಸ್ಥೆಗಳ ಹೆಚ್ಚುವರಿ ಶುಲ್ಕ ಮನ್ನಾ ಮಾಡುವುದು ಹಾಗೂ ಅಗತ್ಯವಿದ್ದಲ್ಲಿ ಮಾನವೀಯ ನೆರವು ಒದಗಿಸುವಂತೆ ಸೂಚನೆ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:24 pm, Mon, 2 March 26

Source link

Leave a Reply

Your email address will not be published. Required fields are marked *