ದೆಹಲಿ, ಜೂ.27: ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಹಮ್ಮಿಕೊಂಡಿರುವ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯು ಭಾರೀ ರಾಜಕೀಯ ಜಟಾಪಟಿ ಮತ್ತು ಚರ್ಚೆಗಳಿಗೆ ಕಾರಣವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಎರಡನೇ ಹಂತದ ಪರಿಷ್ಕರಣೆಯಲ್ಲೇ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬರೋಬ್ಬರಿ 5 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಕಳೆದ ವರ್ಷ ಅಕ್ಟೋಬರ್ 27 ರಂದು ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸ್ಗಢ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಗುಜರಾತ್, ಮಧ್ಯಪ್ರದೇಶ ಮತ್ತು ಗೋವಾ ಸೇರಿದಂತೆ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದ SIR ಪ್ರಕ್ರಿಯೆಯನ್ನು ಘೋಷಿಸಲಾಗಿತ್ತು. ಈ ರಾಜ್ಯಗಳಲ್ಲಿ ಪರಿಷ್ಕರಣೆಗೆ ಮುನ್ನ ಒಟ್ಟು ಮತದಾರರ ಸಂಖ್ಯೆ 50.99 ಕೋಟಿಯಷ್ಟಿತ್ತು. ಆದರೆ, ಪ್ರಕ್ರಿಯೆಯ ನಂತರ ಈ ಸಂಖ್ಯೆ 45.81 ಕೋಟಿಗೆ ಕುಸಿದಿದೆ. ಅಂದರೆ, ಒಟ್ಟಾರೆಯಾಗಿ ಶೇಕಡಾ 10.2 ರಷ್ಟು (ಸುಮಾರು 5.18 ಕೋಟಿಗೂ ಹೆಚ್ಚು) ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.
ಈ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಒಟ್ಟು 66,88,636 ಮೃತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಇದರಲ್ಲಿ ಉತ್ತರ ಪ್ರದೇಶದಿಂದ ಅತಿ ಹೆಚ್ಚು ಅಂದರೆ 25.47 ಲಕ್ಷ ಮತ್ತು ಪಶ್ಚಿಮ ಬಂಗಾಳದಿಂದ 24.16 ಲಕ್ಷ ಮೃತ ವ್ಯಕ್ತಿಗಳ ಹೆಸರುಗಳನ್ನು ಕೈಬಿಡಲಾಗಿದೆ. ಸಾರ್ವಜನಿಕ ಆಕ್ಷೇಪಣೆಗಳು ಮತ್ತು ನ್ಯಾಯಾಂಗ ತೀರ್ಪಿನ ಪ್ರಕ್ರಿಯೆಗಳ ನಂತರ ಹೆಚ್ಚುವರಿಯಾಗಿ 63.16 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಈ 12 ರಾಜ್ಯಗಳ ಪೈಕಿ ಉತ್ತರ ಪ್ರದೇಶವು ತನ್ನ ಅಂತಿಮ ಮತದಾರರ ಪಟ್ಟಿಯ ದತ್ತಾಂಶವನ್ನು ಕೊನೆಯದಾಗಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಡ್ರಗ್ಸ್ ಮುಕ್ತ ಭಾರತಕ್ಕೆ ಮಾಸ್ಟರ್ ಪ್ಲಾನ್; 3 ವರ್ಷದ ‘ವಿಷನ್ ಡಾಕ್ಯುಮೆಂಟ್ ಬಿಡುಗಡೆ ಮಾಡಿದ ಅಮಿತ್ ಶಾ
ಕಳೆದ ವರ್ಷ ಜೂನ್ 24 ರಂದು ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಈ ಪ್ರಾಯೋಗಿಕ SIR ಪ್ರಕ್ರಿಯೆಯನ್ನು ಅಲ್ಲಿ ಮೊದಲ ಬಾರಿಗೆ ಆರಂಭಿಸಲಾಗಿತ್ತು. ಆ ಸಂದರ್ಭದಲ್ಲಿ ಸೂಕ್ತ ದಾಖಲೆಗಳಿಲ್ಲದ ಕಾರಣಕ್ಕಾಗಿ ಚುನಾವಣಾ ಆಯೋಗವು ಬಿಜೆಪಿಯ ಮಾತಿನಂತೆ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಮತ್ತು ಕಾರ್ಯಕರ್ತರು ಭಾರಿ ಆರೋಪ ಮಾಡಿದ್ದರು. ಬಿಹಾರದಲ್ಲಿ ಸುಮಾರು 65 ಲಕ್ಷ ಮತಗಳನ್ನು ಕಡಿತಗೊಳಿಸಲಾಗಿತ್ತು. ಆದರೆ, ಈ ವರ್ಷದ ಮಾರ್ಚ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಈ ‘SIR’ ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವನ್ನು ಸರ್ವಾನುಮತದಿಂದ ಎತ್ತಿಹಿಡಿದು ಇದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.
ಮತದಾರರ ಪಟ್ಟಿಯ ಈ ಶುದ್ಧೀಕರಣ ಪ್ರಕ್ರಿಯೆಯು ಈಗ ಕೇವಲ ಮತದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಗಳ ನಂತರ ಎರಡೂ ಸರ್ಕಾರಗಳು ಒಂದು ಮಹತ್ವದ ಆದೇಶ ಹೊರಡಿಸಿವೆ. ಅದರಂತೆ, SIR ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡಿರುವ ವ್ಯಕ್ತಿಗಳನ್ನು ರಾಜ್ಯದ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಸೌಲಭ್ಯಗಳಿಂದಲೂ ಹೊರಗಿಡಲಾಗುತ್ತಿದೆ. ವೋಟರ್ ಲಿಸ್ಟ್ನ ಡೇಟಾವನ್ನು ಸಾಮಾಜಿಕ ಭದ್ರತೆಯೊಂದಿಗೆ ಲಿಂಕ್ ಮಾಡಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
