ಬೆಂಗಳೂರು ಆ.3: ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಲ್ಲಿ ಬಿಗ್ ರಿಲೀಫ್ ಸಿಕ್ಕ ಬೆನ್ನಲ್ಲೇ, ಅವರ ಶಾಸಕ ಸ್ಥಾನದ ಅನರ್ಹತೆ ಆದೇಶವನ್ನು ವಿಧಾನಸಭೆ ಸಚಿವಾಲಯ ಅಧಿಕೃತವಾಗಿ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಶಾಸಕರಾಗಿ ಕಾರ್ಯನಿರ್ವಹಿಸಲು ಇದ್ದ ಕಾನೂನು ಅಡಚಣೆಗಳು ನಿವಾರಣೆಯಾಗಿವೆ.
ಹೈಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ವಿಧಾನಸಭೆ ಸಚಿವಾಲಯವು ವಿನಯ್ ಕುಲಕರ್ಣಿ ಅವರ ಅನರ್ಹತೆಯನ್ನು ಹಿಂಪಡೆದು ನೂತನ ಸುತ್ತೋಲೆ ಹೊರಡಿಸಿದೆ. ಅನರ್ಹತೆ ಆದೇಶ ರದ್ದಾಗಿರುವುದರಿಂದ ವಿನಯ್ ಕುಲಕರ್ಣಿ ಅವರು ಶಾಸಕರಾಗಿ ತಮ್ಮ ಕರ್ತವ್ಯಗಳನ್ನು ಮರುಆರಂಭಿಸಲಿದ್ದಾರೆ.
ಹೈಕೋರ್ಟ್ ತೀರ್ಪು ಹಾಗೂ ವಿಧಾನಸಭೆ ಸಚಿವಾಲಯದ ಆದೇಶ ಹೊರಬಿದ್ದ ಬೆನ್ನಲ್ಲೇ ಧಾರವಾಡ ಹಾಗೂ ಬೆಳಗಾವಿ ಭಾಗದ ವಿನಯ್ ಕುಲಕರ್ಣಿ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್
ಯೋಗೀಶ್ ಗೌಡ ಕೊಲೆ ಪ್ರಕರಣ: ಹೈಕೋರ್ಟ್ನಿಂದ ತೀರ್ಪಿಗೆ ತಡೆಯಾಜ್ಞೆ, 10 ಜನರಿಗೆ ಜಾಮೀನು
ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಶುಕ್ರವಾರ ಪ್ರಮುಖ ತೀರ್ಪು ಹೊರಬಿದ್ದಿದೆ. ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ತಡೆಹಿಡಿದು, ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಜತೆಗೆ 5 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಹಾಗೂ ಜಿ. ಬಸವರಾಜ ಅವರಿದ್ದ ದ್ವಿಪೀಠ ಆದೇಶಿಸಿದೆ. ವಿನಯ್ ಕುಲಕರ್ಣಿ ಅವರೊಂದಿಗೆ ಚಂದ್ರಶೇಖರ ಇಂಡಿ (ಚಂದು ಮಾಮ), ದಿನೇಶ್, ಅಶ್ವತ್ಥ್, ಸುನಿಲ್, ನಜೀರ್ ಅಹ್ಮದ್, ಷಾನವಾಜ್, ನೂತನ, ಹರ್ಷಿತ್ ಹಾಗೂ ಚನ್ನಕೇಶವ ಟಿಂಗರಿಕರ್ಗೂ ಜಾಮೀನು ಲಭಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ