Headlines

ನೈಸ್ ರಸ್ತೆ ಭೂಸ್ವಾಧೀನ ಪ್ರಕರಣ: ನೂರಾರು ರೈತರಿಗೆ ಹೈಕೋರ್ಟ್ ಬಿಗ್ ರಿಲೀಫ್, ನೈಸ್ ಮೇಲ್ಮನವಿ ವಜಾ – Kannada News | Karnataka High Court Dismisses NICE Appeal in Land Acquisition Case, Major Relief for Hundreds of Farmers

ನೈಸ್‌ಗೆ ಹೈಕೋರ್ಟ್ ಶಾಕ್Image Credit source: tv9

ಬೆಂಗಳೂರು, ಜುಲೈ 29: ನೈಸ್ ರಸ್ತೆ (NICE Road) ಯೋಜನೆಗಾಗಿ ಕೆಐಎಡಿಬಿಯಿಂದ ನಡೆದ ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೂರಾರು ರೈತರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ಮಹತ್ವದ ರಿಲೀಫ್ ನೀಡಿದೆ. ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿ ಡಿಕೆ ಸಿಂಗ್ ಹಾಗೂ ನ್ಯಾಯಮೂರ್ತಿ ಟಿಎಂ ನದಾಫ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಪ್ರಕರಣದಲ್ಲಿ ರೈತರ ಪರ ಹಿರಿಯ ವಕೀಲ ಹೆಚ್‌.ಎನ್. ಶಶಿಧರ್ ವಾದ ಮಂಡಿಸಿದ್ದರು.

ಉನ್ನತ ಮಟ್ಟದ ತನಿಖೆ ಅಗತ್ಯ ಎಂದ ಹೈಕೋರ್ಟ್

ವಿಚಾರಣೆ ವೇಳೆ, ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದ ಹಲವು ಗಂಭೀರ ಅಂಶಗಳ ಬಗ್ಗೆ ಹೈಕೋರ್ಟ್ ಪ್ರಸ್ತಾಪಿಸಿದೆ. ನೈಸ್ ರಸ್ತೆ ನಿರ್ಮಾಣದ ವೇಳೆ ಕೆರೆಗಳು ಹಾಗೂ ಜಮೀನುಗಳನ್ನು ಅತಿಕ್ರಮಿಸಿರುವ ಆರೋಪಗಳಿದ್ದು, ಈ ಎಲ್ಲ ವಿಷಯಗಳ ಕುರಿತು ಉನ್ನತ ಮಟ್ಟದ ತನಿಖೆ ಅಗತ್ಯವಿದೆ ಎಂದು ಪೀಠ ಹೇಳಿದೆ.

ರೈತರಿಗೆ ಪರಿಹಾರ ನೀಡದ ಬಗ್ಗೆ ಉಲ್ಲೇಖ

ರಸ್ತೆ ಬಳಕೆದಾರರಿಂದ ದೊಡ್ಡ ಪ್ರಮಾಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸಲಾಗಿದ್ದರೂ, ಭೂಮಿ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ನೀಡದೆ ಭೂಮಿ ವಶಕ್ಕೆ ಪಡೆಯಲಾಗಿದೆ ಎಂಬ ಆರೋಪಗಳನ್ನೂ ನ್ಯಾಯಾಲಯ ಉಲ್ಲೇಖಿಸಿದೆ.

ಇದೇ ವೇಳೆ, ನೈಸ್ ಸಂಸ್ಥೆಯ ಅಕ್ರಮಗಳ ಬಗ್ಗೆ ಸರ್ಕಾರವೂ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸಂಪೂರ್ಣ ಪ್ರಕ್ರಿಯೆ ಕುರಿತು ಸ್ವತಂತ್ರ ತನಿಖೆ ಹಾಗೂ ಫೊರೆನ್ಸಿಕ್ ಆಡಿಟ್ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಬೆಂಗಳೂರು ಸವಾರರಿಗೆ ಮತ್ತೊಂದು ಬಿಗ್ ಶಾಕ್: ಇಂದಿನಿಂದ ನೈಸ್ ರಸ್ತೆ, ಇ-ಸಿಟಿ ಫ್ಲೈಓವರ್ ಟೋಲ್ ದರ ಭಾರಿ ಏರಿಕೆ

ಈ ಹಿನ್ನೆಲೆಯಲ್ಲಿ, ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಭಾಗೀಯ ಪೀಠ ವಜಾಗೊಳಿಸಿದ್ದು, ಪ್ರಕರಣದಲ್ಲಿ ರೈತರ ಪರ ಮಹತ್ವದ ಬೆಳವಣಿಗೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *