ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಹೈ ಅಲರ್ಟ್: ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆ – Kannada News | Karnataka MLC Election 2026: Cross Voting Fears Grip Congress and JDS Ahead of June 18 Polls; Resort Politics Likely

ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆImage Credit source: tv9

ಬೆಂಗಳೂರು, ಜೂನ್ 12: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಯ (Karnataka MLC Election) ಕಾವು ಜೋರಾಗಿದ್ದು, ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಅಡ್ಡ ಮತದಾನ ಮತ್ತು ಕುದುರೆ ವ್ಯಾಪಾರದ ಭೀತಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್ (JDS) ಅನ್ನು ಆವರಿಸಿದೆ. ಶಾಸಕರನ್ನು ಹಿಡಿದಿಟ್ಟುಕೊಂಡು ಒಗ್ಗಟ್ಟು ಪ್ರದರ್ಶಿಸಲು ಎರಡೂ ಪಕ್ಷಗಳು ರೆಸಾರ್ಟ್ ರಾಜಕೀಯದ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಪ್ರತಿ ಶಾಸಕರ ಮತವೂ ನಿರ್ಣಾಯಕವಾಗಿದ್ದು, ಯಾವುದೇ ರೀತಿಯ ಮತ ವಿಭಜನೆ ಅಥವಾ ಅಡ್ಡ ಮತದಾನವನ್ನು ತಡೆಯುವುದು ಪಕ್ಷಗಳಿಗೆ ಸವಾಲಾಗಿದೆ.

ಮುಖ್ಯಾಂಶಗಳು

  • ಜೂನ್ 18ರ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೋರಾದ ರಾಜಕೀಯ ಚಟುವಟಿಕೆ
  • ಶಾಸಕರ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್, ಜೆಡಿಎಸ್ ತಂತ್ರಗಾರಿಕೆ
  • ರೆಸಾರ್ಟ್ ರಾಜಕೀಯ ಶುರುವಾಗುವ ಸಾಧ್ಯತೆ

ಜೆಡಿಎಸ್ ಶಾಸಕರ ಸೆಳೆಯಲು ಕಾಂಗ್ರೆಸ್ ತಂತ್ರ

ವಿಶೇಷವಾಗಿ ಕಾಂಗ್ರೆಸ್ ಪಕ್ಷವು ತಮ್ಮ ಐದನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಜೆಡಿಎಸ್ ಶಾಸಕರ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಒಗ್ಗೂಡಿಸಿ, ಅವರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ರೆಸಾರ್ಟ್‌ಗೆ ಸ್ಥಳಾಂತರಿಸುವ ಕುರಿತು ಜೆಡಿಎಸ್ ವಲಯದಲ್ಲಿ ಗಂಭೀರ ಚರ್ಚೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಇಂದು (ಜೂನ್ 12) ಸಂಜೆ ಶಾಸಕರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ರೆಸಾರ್ಟ್ ಪಾಲಿಟಿಕ್ಸ್ ಬಗ್ಗೆ ಪ್ರಮುಖ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ.

ಇದೇ ರೀತಿ, ಕಾಂಗ್ರೆಸ್ ನಾಯಕರು ಕೂಡ ತಮ್ಮ ಶಾಸಕರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಯಾರಿಗೂ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅಡ್ಡ ಮತದಾನವಾಗದಂತೆ ತಡೆಯುವುದು ಮತ್ತು ಗೆಲ್ಲುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲಿ ಕುತ್ತು ಬಾರದಂತೆ ನೋಡಿಕೊಳ್ಳುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ.

ಇದನ್ನೂ ಓದಿ: ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಈ ಚುನಾವಣೆಯಲ್ಲಿ ಕಾಂಗ್ರೆಸ್ ಐದನೇ ಅಭ್ಯರ್ಥಿಯನ್ನು ಗೆಲ್ಲಿಸುವ ಗುರಿ ಹೊಂದಿದ್ದರೆ, ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶ್ರಮಿಸುತ್ತಿದೆ. ಬಿಜೆಪಿ ಕೂಡ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಜವಾಬ್ದಾರಿ ಅದರ ಮೇಲೂ ಇದೆ. ಆದರೆ, ಪ್ರಮುಖವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿಯ ವಾತಾವರಣ ಸೃಷ್ಟಿಯಾಗಿದ್ದು, ಈ ಎರಡೂ ಪಕ್ಷಗಳ ನಾಯಕರ ಮೇಲೆ ಶಾಸಕರನ್ನು ಸುರಕ್ಷಿತವಾಗಿರಿಸುವ ದೊಡ್ಡ ಜವಾಬ್ದಾರಿ ಇದೆ. ಒಟ್ಟಾರೆಯಾಗಿ, ಪರಿಷತ್ ಚುನಾವಣೆಯಲ್ಲಿ ಕುದುರೆ ವ್ಯಾಪಾರದ ಆತಂಕ ಮತ್ತು ಅಡ್ಡ ಮತದಾನದ ಭೀತಿಯನ್ನು ಎದುರಿಸಲು ರೆಸಾರ್ಟ್ ರಾಜಕೀಯ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *