ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು ಹಾಜರಿಯಲ್ಲಿ ನಟಿ ಶ್ರೀಲೀಲಾ ಸಿನಿಮಾದ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹಾಕಿಕೊಂಡಿದ್ದಾರೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಿದ್ದು, ಇದೀಗ ಸಿನಿಮಾದ ಪ್ರಚಾರದ ಜವಾಬ್ದಾರಿಯನ್ನು ಶ್ರೀಲೀಲಾ ವಹಿಸಿಕೊಂಡಿದ್ದು, ತಾವೇ ಆಂಧ್ರ-ತೆಲಂಗಾಣದ ಪ್ರಮುಖ ನಗರಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ಹೈದರಾಬಾದ್​​ನ ಗುರುನಾನಕ್ ವಿಶ್ವವಿದ್ಯಾಲಯಕ್ಕೆ ತೆರಳಿ, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಪ್ರಚಾರ ಮಾಡಿದ್ದಾರೆ. ವಿಶೇಷವೆಂದರೆ ಸಿನಿಮಾದ ನಾಯಕ, ನಿರ್ದೇಶಕ ಇತರೆ ಯಾರೂ ಇಲ್ಲದೇ ಕೇವಲ ತಮ್ಮ ತಂಡದೊಂದಿಗೆ ಒಬ್ಬರೇ ಹೋಗಿ ಸಿನಿಮಾ ಪ್ರಚಾರ ಮಾಡಿದ್ದಾರೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ರಾಶಿ ಖನ್ನಾ ಸಹ ನಾಯಕಿಯಾಗಿ ನಟಿಸಿದ್ದಾರೆ. ಆದರೆ ಅವರೂ ಸಹ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ.

ಗುರುನಾನಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಟ್ಟಿಗೆ ಸಂವಾದ ಮಾಡಿದ್ದಲ್ಲದೆ, ಸಿನಿಮಾದ ಡೈಲಾಗ್ ಹೇಳಿ, ಹಾಡುಗಳ ಸಾಲುಗಳನ್ನು ಹೇಳಿ ಸಖತ್ ಕ್ರೇಜ್ ಹುಟ್ಟಿಸಿದ್ದಾರೆ. ವಿದ್ಯಾರ್ಥಿಗಳಿಂದ ಸಿನಿಮಾದ ಹಾಡಿನ ಸಾಲುಗಳನ್ನು ಸಹ ಹಾಡಿಸಿದ್ದು, ತಮ್ಮ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಶ್ರೀಲೀಲಾರ ಈ ಶ್ರಮವನ್ನು ಗುರುತಿಸಿರುವ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳನ್ನು ಹಂಚಿಕೊಂಡು, ಶ್ರೀಲೀಲಾರನ್ನು ಕೊಂಡಾಡಿದೆ.

ಇದನ್ನೂ ಓದಿ:ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಇಂದಷ್ಟೆ ಸಿನಿಮಾದ ಹಾಡಿನ ಸಣ್ಣ ತುಣಕನ್ನು ಸಹ ಬಿಡುಗಡೆ ಮಾಡಿದೆ. ‘ಧುರಂಧರ್ 2’ ಎದುರಿಗೆ ‘ಉಸ್ತಾದ್ ಭಗತ್ ಸಿಂಗ್’ ಸ್ಪರ್ಧೆ ಇದ್ದು, ಸಿನಿಮಾಕ್ಕೆ ಭರ್ಜರಿ ಪ್ರಚಾರದ ಅವಶ್ಯಕತೆ ಇದೆ. ಈಗಾಗಲೇ ‘ಧುರಂಧರ್ 2’ ಸಿನಿಮಾದಿಂದಾಗಿ ಪ್ರೀಮಿಯರ್ ಶೋ ಆಯೋಜಿಸುವ ಯೋಜನೆಯನ್ನು ಚಿತ್ರತಂಡ ಕೈಬಿಟ್ಟಿದೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ನಿರ್ಮಾಣ ಸಂಸ್ಥೆ ಶೀಘ್ರವೇ ಹಮ್ಮಿಕೊಳ್ಳಲಿದ್ದು ನಟ ಪವನ್ ಕಲ್ಯಾಣ್ ಅವರು ಆ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಪವನ್ ಕಲ್ಯಾಣ್​​ರ ಆಪ್ತ ಹರೀಶ್ ಶಂಕರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಹಾಡುಗಳನ್ನು ನಿರ್ದೇಶಿಸಿರುವುದು ದೇವಿಶ್ರೀ ಪ್ರಸಾದ್, ಹಿನ್ನೆಲೆ ಸಂಗೀತ ನೀಡಿರುವುದು ಎಸ್ ತಮನ್. ಸಿನಿಮಾನಲ್ಲಿ ಶ್ರೀಲೀಲಾ ಜೊತೆಗೆ ರಾಶಿ ಖನ್ನಾ ಸಹ ನಟಿಸಿದ್ದಾರೆ. ಇವರುಗಳ ಜೊತೆಗೆ ಆರ್ ಪಾರ್ತಿಬನ್, ಆಶುತೋಶ್ ರಾಣಾ, ನವಾಬ್ ಶಾ, ರಾಜೀವ್ ಕನಕಾಲ ಇನ್ನೂ ಕೆಲವು ಕಲಾವಿದರು ನಟಿಸಿದ್ದಾರೆ. ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *