ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ.

ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು ಹಿಂಸಾಚಾರದ ದೂರುಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳದ ಡಿಜಿಪಿಗೆ ಶೋಕಾಸ್ ನೋಟಿಸ್ ನೀಡಿದೆ. ಹಾಗೇ, ಪಶ್ಚಿಮ ಬಂಗಾಳದ SIR ಕುರಿತ ವಿಚಾರಣೆಯ ಸಂದರ್ಭದಲ್ಲಿ SIR ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್ ಯಾವುದೇ ಅಡಚಣೆಗೆ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Video:ಸುಪ್ರೀಂನಲ್ಲಿ ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

ತಮ್ಮ ಲಿಖಿತ ಸಲ್ಲಿಕೆಗಳನ್ನು ಉಲ್ಲೇಖಿಸಿ, ಚುನಾವಣಾ ಆಯೋಗದ ಪರ ವಕೀಲ ಶ್ಯಾಮ್ ದಿವಾನ್ ಅವರು ಫೆಬ್ರವರಿ 14ರೊಳಗೆ ಸಂಪೂರ್ಣ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದು ವಿಷಯದ ತುರ್ತುಸ್ಥಿತಿಯನ್ನು ಒತ್ತಿಹೇಳುತ್ತದೆ ಎಂದ ಅವರು ಫೆಬ್ರವರಿ 4ರಂದು ನ್ಯಾಯಾಲಯವು ಮಾಡಿದ ಅವಲೋಕನಗಳನ್ನು ಸಹ ಉಲ್ಲೇಖಿಸಿದರು. ದಿವಾನ್ ಪ್ರಕಾರ, ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 7.08 ಕೋಟಿ ಮತದಾರರಿದ್ದಾರೆ. ಇವರಲ್ಲಿ ಸುಮಾರು 6.75 ಕೋಟಿ ಮತದಾರರನ್ನು ಈಗಾಗಲೇ ಗುರುತಿಸಲಾಗಿದೆ. ಅವರನ್ನು ಅಸ್ತಿತ್ವದಲ್ಲಿರುವ ದಾಖಲೆಗಳೊಂದಿಗೆ ಲಿಂಕ್ ಮಾಡಲಾಗಿದೆ. ಆದರೆ ಸುಮಾರು 32 ಲಕ್ಷ ಮತದಾರರನ್ನು ಇನ್ನೂ ಗುರುತಿಸಲಾಗಿಲ್ಲ. ತಾರ್ಕಿಕ ವ್ಯತ್ಯಾಸ ಪ್ರಕ್ರಿಯೆಯ ಮೂಲಕ ಸುಮಾರು 1.36 ಕೋಟಿ ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ (SIR) ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಅರ್ಜಿಯಲ್ಲಿ ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜಕೀಯ ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮತದಾರರ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿರುವ ವಿಧಾನವು ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸೇರಿದ ಲಕ್ಷಾಂತರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಕಾರಣವಾಗುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ

ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಯಾವುದೇ ಮತದಾರರ ಹೆಸರನ್ನು ಅದರಲ್ಲೂ ವಿಶೇಷವಾಗಿ ತಾರ್ಕಿಕ ವ್ಯತ್ಯಾಸ ವರ್ಗದ ಅಡಿಯಲ್ಲಿ ಇರಿಸಲಾದ ಮತದಾರರ ಹೆಸರನ್ನು ಡಿಲೀಟ್ ಮಾಡದಂತೆ ಚುನಾವಣಾ ಆಯೋಗಕ್ಕೆ ಮಧ್ಯಂತರ ನಿರ್ದೇಶನಗಳನ್ನು ನೀಡುವಂತೆ ಅವರು ಕೋರಿದ್ದಾರೆ. ಹಿಂದಿನ ವಿಚಾರಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತ್ತು. ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *