ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಇತಿಹಾಸ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರ ನಡುವೆ ರಾಜ್ಯದ ಹಲವೆಡೆ ತೀವ್ರ ಘರ್ಷಣೆಗಳು ಸಂಭವಿಸಿವೆ. ಗೆಲುವಿನ ಸಂಭ್ರಮಾಚರಣೆ ಮತ್ತು ಸೋಲಿನ ಹತಾಶೆಯ ನಡುವೆ ಆರಂಭವಾದ ಈ ಸಂಘರ್ಷವು ಈಗ ಹಿಂಸಾಚಾರಕ್ಕೆ ತಿರುಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿದ್ದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ. ಈ ಫಲಿತಾಂಶದ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಉಭಯ ಪಕ್ಷಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಅದು ಭೌತಿಕ ಹಲ್ಲೆಯ ಹಂತಕ್ಕೆ ತಲುಪಿದೆ. ಚುನಾವಣಾ ಆಯೋಗವು 100 ಸ್ಥಾನಗಳಲ್ಲಿ ಅಕ್ರಮ ನಡೆಸಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದು, ಇದು ಕಾರ್ಯಕರ್ತರ ನಡುವಿನ ಆಕ್ರೋಶಕ್ಕೆ ತುಪ್ಪ ಸುರಿದಂತಾಗಿದೆ.
ಕೋಲ್ಕತ್ತಾದ ಕೆಲ ವಾರ್ಡ್ಗಳಲ್ಲಿ ಮತ್ತು ನಗರದ ಭಾಗಗಳಲ್ಲಿ ನೇರ ಗಲಾಟೆಗಳು ನಡೆದಿವೆ. ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಮುಖಾಮುಖಿ ಸಂಘರ್ಷಗಳಾಗಿವೆ. ಆಂಚೋಲ್ ಪ್ರದೇಶದಲ್ಲೂ ದೊಡ್ಡ ಪ್ರಮಾಣದ ಗಲಾಟೆ ನಡೆದಿದ್ದು, ಟಿಎಂಸಿ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂಬ ಆರೋಪಗಳಿವೆ. ಹುಗ್ಲಿ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು, ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಬಂದಿದೆ. ಈವರೆಗೂ ಒಟ್ಟು ನಾಲ್ಕು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
