ಪಿಓಪಿ ಗಣೇಶ ಮೂರ್ತಿ ನಿಷೇಧ, ಶಬ್ಧ ಮಾಲೀನ್ಯಕ್ಕೂ ಅವಕಾಶವಿಲ್ಲ: ಈಶ್ವರ್​​​​ ಖಂಡ್ರೆ ಸೂಚನೆ – Kannada News | Minister Eshwar Khandre directs gram panchayats to permit only eco friendly clay Ganesh idols

ಬೆಂಗಳೂರು, (ಆಗಸ್ಟ್ 06): ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ (Ganesh Festival) (Ganesh Festival) ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ(Ganesh Idol) ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಪ್ರೇರೇಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಅಲ್ಲದೇ ಗಣೇಶ ಉತ್ಸವ ವೇಳೆ ಶಬ್ಧ ಮಾಲೀನ್ಯಕ್ಕೆ ಅವಕಾಶವಿಲ್ಲ ಎಂದು ಖಡಕ್ ಆಗಿ ಹೇಳಿದ್ದು, ಕಾನೂನು ಪ್ರಕಾರ ಕಡಿಮೆ ಡೆಸಿಬಲ್ ಸ್ಪೀಕರ್ ಬಳಸಬೇಕು ಎಂದಿದ್ದಾರೆ.

ಇಲಾಖೆಯ ಕಾರ್ಯದರ್ಶಿಯವರಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಗಣೇಶ ಪರಿಸರದಿಂದ (ಮಣ್ಣಿನಿಂದ) ಹುಟ್ಟಿದ ದೇವರಾಗಿದ್ದು, ಜಲ ಮೂಲಗಳ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅವಕಾಶ ನೀಡುವಂತೆ ಕ್ರಮ ವಹಿಸಲು ತಿಳಿಸಿದ್ದಾರೆ.

ಇದನ್ನೂ ಓದಿ: ಬರ್ತ್‌ಡೇ, ಪ್ರಿವೆಡ್ಡಿಂಗ್‌ ಶೂಟ್​​​​ಗೆ ಬಾಡಿಗೆಗೆ ಸಿಗುತ್ತೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌, ಬಾಡಿಗೆ ಎಷ್ಟು?

ಪರಿಸರಕ್ಕೆ ಮಾರಕವಾದ ಪಿಓಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ರಾಜ್ಯ ಘನ ಹೈಕೋರ್ಟ್ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿರುತ್ತದೆ ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಲ ಮೂಲಗಳ ಹಾಗೂ ಪರಿಸರ ರಕ್ಷಣೆಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಹಬ್ಬದ ಸಂಭ್ರಮದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವಾಗದ ರೀತಿಯಲ್ಲಿ ಈಗಿನಿಂದಲೇ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನೆರವು ಪಡೆಯುವಂತೆ ಸೂಚಿಸಿರುವ ಅವರು, ಸಾರ್ವಜನಿಕರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪಂಚಾಯತಿಗಳ ಮಟ್ಟದಲ್ಲಿ ಮಾಡಲು ಆದೇಶ ನೀಡಿದ್ದಾರೆ.

ಕ್ಯಾಲ್ಷಿಯಂ, ಸಲ್ಫೇಟ್, ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ತಯಾರಿಸುವ ಮೂರ್ತಿಗಳಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುವುದರ ಜೊತೆಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸುವುದರಿಂದ ಪರಿಸರಕ್ಕೆ ಹಾನಿಕಾರಕವಾಗಿರುತ್ತದೆ ಎಂದೂ ಲಿಖಿತ ಸೂಚನೆಯಲ್ಲಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಪಿಓಪಿ ಮೂರ್ತಿಗಳನ್ನು ಕೆರೆ, ಬಾವಿ, ನದಿ ಸೇರಿದಂತೆ ಜಲ ಮೂಲಗಳಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆ 1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ನದಿ, ಸರೋವರ, ಕೆರೆ, ಕಟ್ಟೆ, ಬಾವಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದ್ದಾರೆ.

Source link

Leave a Reply

Your email address will not be published. Required fields are marked *