‘ಪ್ರಧಾನಿ ಸರ್ ನೀವು ತಕ್ಷಣವೇ ಹಸ್ತಕ್ಷೇಪ ಮಾಡಿ’: ಮೇಕೆದಾಟು ಯೋಜನೆ ವಿರೋಧಿಸಿ ವಿಜಯ್ ಮೋದಿಗೆ ಪತ್ರ – Kannada News | Tamil Nadu CM Joseph Vijay Writes To PM Modi Opposing Karnataka Mekedatu Project

ಚೆನ್ನೈ ಜು .28: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ (Mekedatu Dam Project) ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ತಕ್ಷಣದ ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ನೆನ್ನೆ ಅಂದರೆ ಜು.27ರಂದು ದೆಹಲಿ ಮುಂಗಾರು ಅಧಿವೇಶದ ವೇಳೆ ಸಂಸತ್ತಿನಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಈ ಬಗ್ಗೆ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದ್ದು, ಗಡಿಯೊಳಗೆ ನೀರು ಬಳಕೆಗೆ ಕರ್ನಾಟಕಕ್ಕೆ ಪೂರ್ಣ ಅಧಿಕಾರ ಇದೆ. ಸುಪ್ರೀಂಕೋರ್ಟ್​​​​ ತೀರ್ಪಿನಲ್ಲಿ ಎಲ್ಲೂ ಒಪ್ಪಿಗೆ ಪಡೆಯಲು ಹೇಳಿಲ್ಲ ಎಂದು ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯಂತಹ ನೆರೆ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದೀಗ ಈ ಬಗ್ಗೆ ಅಸಮಾಧನಗೊಂಡಿರುವ ವಿಜಯ್​​​​, ಈ ಬಗ್ಗೆ ತಕ್ಷಣವೇ ಪ್ರಧಾನಿ ಮೋದಿ ಅವರು ಹಸ್ತಕ್ಷೇಪ ಮಾಡಬೇಕು ಎಂದು ಹೇಳಿದ್ದಾರೆ. ಯೋಜನೆಯಿಂದ ಕೆಳಭಾಗದ ರಾಜ್ಯದ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಗೆ ಬರೆದ ಪತ್ರದಲ್ಲೇನಿದೆ?

“ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕೆಳಭಾಗದ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ” ಎಂಬ ಕೇಂದ್ರ ಜಲಶಕ್ತಿ ಸಚಿವಾಲಯದ ಹೇಳಿಕೆಯನ್ನು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಟುವಾಗಿ ಖಂಡಿಸಿದ್ದಾರೆ. ಆಲಮಟ್ಟಿ ಪ್ರಕರಣದಲ್ಲಿ ಉನ್ನತ ನ್ಯಾಯಾಲಯ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ಅವರು, ಕೆಳಭಾಗದ ರಾಜ್ಯಗಳ (Lower Riparian States) ಸ್ಪಷ್ಟ ಸಮ್ಮತಿ ಇಲ್ಲದೆ ಯಾವುದೇ ಮೇಲ್ಭಾಗದ ರಾಜ್ಯವು ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ವಾದಿಸಿದ್ದಾರೆ. ಕರ್ನಾಟಕದ ಈ ಪ್ರಸ್ತಾವನೆಯು ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ಅಂತಿಮ ಆದೇಶ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಾವೇರಿ ತೀರ್ಪಿನ ನಿಯಮ 11 ಮತ್ತು 20ರ ಅಡಿಯಲ್ಲಿ ನದಿ ಜಲಾನಯನ ಪ್ರದೇಶದ ಸಹ-ರಾಜ್ಯಗಳ ಪರಸ್ಪರ ಸಮ್ಮತಿ ಕಡ್ಡಾಯವಾಗಿದೆ. ಮೇಕೆದಾಟು ಯೋಜನೆಯನ್ನು ಕೇವಲ ಒಂದು ಇಂಜಿನಿಯರಿಂಗ್ ಅಥವಾ ಕುಡಿಯುವ ನೀರಿನ ಯೋಜನೆಯಾಗಿ ನೋಡಬಾರದು. ಇದು ಲಕ್ಷಾಂತರ ರೈತರ ಜೀವನಾಧಾರವಾಗಿರುವ ಕಾವೇರಿ ಜಲ ಹಂಚಿಕೆಯ ಸೂಕ್ಷ್ಮ ವಿಷಯವಾಗಿದೆ.

2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿಯನ್ನು (DPR) ಕೇಂದ್ರ ಜಲ ಆಯೋಗವು ನಿಯಮಗಳಿಗೆ ಬದ್ಧವಾಗಿರದ ಕಾರಣ ಪರಿಶೀಲನೆಗೆ ವಾಪಸ್ ಕಳುಹಿಸಿದ್ದನ್ನು ತಮಿಳುನಾಡು ಸಿಎಂ ಪತ್ರದಲ್ಲಿ ನೆನಪಿಸಿದ್ದಾರೆ. ಜೊತೆಗೆ, ಪಂಬಾರ್ ಜಲವಿದ್ಯುತ್ ಯೋಜನೆಯ ಹಳೆಯ ತೀರ್ಪಿನ ಉದಾಹರಣೆಯನ್ನು ನೀಡಿದ್ದು, ಯಾವುದೇ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಕೃಷಿ ಹಾಗೂ ನೀರಾವರಿ ವ್ಯವಸ್ಥೆಗೆ ಭಾರಿ ಧಕ್ಕೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದ ಕೇಂದ್ರ ಜಲಶಕ್ತಿ ಸಚಿವಾಲಯ

ಮೇಕೆದಾಟು ಡಿಪಿಆರ್ ತಿರಸ್ಕರಿಸಲು ಆಗ್ರಹ:

ಕಾವೇರಿ ನ್ಯಾಯಾಧಿಕರಣದ ಆದೇಶ ಹಾಗೂ ಸುಪ್ರೀಂ ಕೋರ್ಟ್‌ ತೀರ್ಪಿಗೆ ಬದ್ಧವಾಗಿ ಕೆಳಪಾತ್ರದ ರಾಜ್ಯವಾದ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸಿಎಂ ವಿಜಯ್ ಒತ್ತಾಯಿಸಿದ್ದಾರೆ. ಕರ್ನಾಟಕ ಸಲ್ಲಿಸಿರುವ ಮೇಕೆದಾಟು ಯೋಜನೆಯ ಡಿಪಿಆರ್ ಪ್ರಸ್ತಾವನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡದಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಸಿಡಬ್ಲ್ಯುಸಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಪ್ರಧಾನಿ ಮೋದಿಯವರನ್ನು ವಿನಂತಿಸಿದ್ದಾರೆ.

ಸಂಸತ್ತಿನಲ್ಲಿ ಅನ್ಬುಮಣಿ ರಾಮದಾಸ್ ಕೇಳಿದ್ದೇನು?

ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ರೀತಿಯ ರಚನೆಯನ್ನು ನಿರ್ಮಿಸಲು ತಮಿಳುನಾಡು, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳ ಒಪ್ಪಿಗೆಯನ್ನು ಪಡೆಯಬೇಕು ಎಂಬ ಕಾವೇರಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2018 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿದಿದೆಯೇ? ಪ್ರಸ್ತಾವಿತ ಮೇಕೆದಾಟು ಯೋಜನೆಗೆ ಕರ್ನಾಟಕ ಕೆಳಗಿನ ನದಿ ತೀರ್ಪಿನ ರಾಜ್ಯಗಳ ಒಪ್ಪಿಗೆಯನ್ನು ಪಡೆದಿದೆಯೇ? ಒಪ್ಪಿಗೆ ಪಡೆದಿದ್ದಲ್ಲಿ ಅದರ ವಿವರಗಳು, ಮತ್ತು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆಯ ಪ್ರಸ್ತುತ ಸ್ಥಿತಿ ಏನು ಎಂದು ಪ್ರಶ್ನಿಸಿದ್ದರು.

ಇದಕ್ಕೆ ಕೇಂದ್ರದ ಉತ್ತರ ಏನು?

ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಮೇಲ್ಭಾಗದ ರಾಜ್ಯವಾದ ಕರ್ನಾಟಕವು ಕೆಳಭಾಗದ ರಾಜ್ಯಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು 2018ರ ಫೆಬ್ರವರಿ 16ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಉಲ್ಲೇಖವಾಗಿಲ್ಲ. 2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರ ಪ್ರಕಾರ, ನ್ಯಾಯಾಧಿಕರಣದ ಆದೇಶಕ್ಕೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದ ವ್ಯಾಪ್ತಿಯಲ್ಲಿ ನೀರಿನ ಬಳಕೆ ಅಥವಾ ಸೌಲಭ್ಯವನ್ನು ನಿಯಂತ್ರಿಸುವ ಹಕ್ಕು ಆಯಾ ರಾಜ್ಯಗಳಿಗೆ ಇದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:00 pm, Tue, 28 July 26

Source link

Leave a Reply

Your email address will not be published. Required fields are marked *